ಬೆಂಗಳೂರು: ಗಾಣಿಗ ಜನಾಂಗದ ಗುರುಪೀಠಕ್ಕೆ ನೀಡಿದ 5 ಕೋಟಿ ರೂ ಅನುದಾನ ಮತ್ತು ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್ಗೆ 8 ಎಕರೆ ಜಮೀನು ಮಂಜೂರು ಮಾಡಿದ್ದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿ.7ಕ್ಕೆ ಮುಂದೂಡಿತು.
ಈ ಸಂಬಂಧ ಎನ್.ಹನುಮೇಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸ್ವಯಂಪ್ರೇರಿತ(ಸುಮೋಟೋ) ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತನೆ ಮಾಡಿಕೊಂಡು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಲೆ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: 2011ರ ಫೆಬ್ರವರಿಯಲ್ಲಿ ಗಾಣಿಗ ಜನಾಂಗದ ಗುರುಪೀಠಕ್ಕೆ ಬಜೆಟ್ನಲ್ಲಿ 5 ಕೋಟಿ ಮೀಸಲು ಇರಿಸಲಾಗಿತ್ತು. ಅಂತೆಯೇ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ನಗರೂರು ಗ್ರಾಮದ ಸರ್ವೇ ನಂಬರ್ 112ರಲ್ಲಿ ಗೋಮಾಳದ 8 ಎಕರೆ ಜಮೀನನ್ನು ವಿಶ್ವ ಗಾಣಿಗ ಸಮುದಾಯ ಟ್ರಸ್ಟ್ ಹೆಸರಿಗೆ ನೋಂದಣಿ ಮಾಡಿಕೊಡಲಾಗಿದೆ.
ಈ ಟ್ರಸ್ಟ್ಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದ ಬಿ.ಜೆ ಪುಟ್ಟಸ್ವಾಮಿ ಅಧ್ಯಕ್ಷರಾಗಿದ್ದರು. ಇವರು ತಮ್ಮ ಅಧಿಕಾರ ಬಳಸಿ ಈ ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ ಎಂಬುದು ಅರ್ಜಿದಾರರ ಆರೋಪ.
ಇದನ್ನೂ ಓದಿ: ಗಾಣಿಗ ಗುರುಪೀಠಕ್ಕೆ ಹಣ, ಜಮೀನು: ಸುಮೋಟೋ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್