ಆನೇಕಲ್: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಐಎಸ್ಬಿಆರ್ ಬಿಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸುಮಾರು 20ಕ್ಕೂ ಹೆಚ್ಚು ಶಿಕ್ಷಕರಿಗೆ ‘ಗುರು ಶ್ರೇಷ್ಠ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಐಎಸ್ಬಿಆರ್ ಬಿಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಸಾಧಕರಿಗೆ 'ಗುರು ಶ್ರೇಷ್ಠ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆ ಕಾರ್ಯಕ್ರಮಕ್ಕೆ ಅತಿಥಿಯಾಗಿ ಎಲ್ಸಿಟಾ ಸಿಇಒ ರಮಾ ಆಗಮಿಸಿ ಮಾತನಾಡಿದರು. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಭವಿಷ್ಯದ ಸಮಾಜದ ಅಡಿಪಾಯ ಶಿಕ್ಷಕರಿಂದಲೇ ಆಗುತ್ತದೆ. ಮಕ್ಕಳನ್ನು ಮಾನವೀಯ ಮೌಲ್ಯಗಳುಳ್ಳ ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರ ಕೊಡುಗೆ ಬೆಲೆ ಕಟ್ಟಲಾಗದ್ದು ಎಂದರು.
ಈ ಕಾರ್ಯಕ್ರಮದಲ್ಲಿ ವಿಶೇಷ ಸಾಧಕರೊಬ್ಬರನ್ನು ಗುರುತಿಸಿ ಗೌರವಿಸಿದ್ದು, ಇಡೀ ಕಾರ್ಯಕ್ರಮಕ್ಕೆ ಮೆರಗು ನೀಡಿತ್ತು. ಶಾಲಾ-ಕಾಲೇಜು ಶಿಕ್ಷಕರ ಜೊತೆಗೆ ಭರತನಾಟ್ಯ, ಗಾಯನ ಕ್ಷೇತ್ರದಲ್ಲಿನ ಸಾಧಕರನ್ನೂ ಗುರುತಿಸಿ ಸನ್ಮಾನಿಸಲಾಯಿತು. ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ನೀಡಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದ ಬಳಿಕ ಪ್ರಶಸ್ತಿ ಸ್ವೀಕರಿಸಿದ ಶಿಕ್ಷಕರು ತಮ್ಮ ವೃತ್ತಿಯ ಅನುಭವಗಳನ್ನು ಹಂಚಿಕೊಂಡರು.