ಬೆಂಗಳೂರು: ವಶಕ್ಕೆ ತೆಗೆದುಕೊಂಡ ಲ್ಯಾಪ್ಟಾಪ್, ಮೊಬೈಲ್ ಸೇರಿದಂತೆ ಗ್ಯಾಜೆಟ್ಗಳಲ್ಲಿನ ಯಾವುದೇ ವ್ಯಕ್ತಿಯ ಖಾಸಗಿ ಅಥವಾ ಗೌಪ್ಯ ಮಾಹಿತಿ ಮೂರನೇ ವ್ಯಕ್ತಿಗೆ ಹಂಚಿಕೆಯಾದರೆ ಅಥವಾ ಸೋರಿಕೆಯಾದರೆ ಇದಕ್ಕೆ ತನಿಖಾಧಿಕಾರಿ(ಐಒ)ಗಳೇ ನೇರ ಹೊಣೆಯಾಗಿದ್ದು, ಈ ಸಂಬಂಧ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ತನಿಖಾಧಿಕಾರಿಗಳು ವಶಪಡಿಸಿಕೊಳ್ಳುವ ಕಂಪ್ಯೂಟರ್, ಸ್ಮಾರ್ಟ್ ಫೋನ್, ಲ್ಯಾಪ್ಟಾಪ್, ಸ್ಟೋರೇಜ್ ಡಿವೈಸ್ಗಳು ಸೇರಿದಂತೆ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಲ್ಲಿನ ಮಾಹಿತಿಯನ್ನು ಸೋರಿಕೆಯಾಗದಂತೆ ರಕ್ಷಿಸಿಡಬೇಕು. ಇದು ಅಧಿಕಾರಿಗಳ ಕರ್ತವ್ಯವೂ ಹೌದು. ಈ ಗೌಪ್ಯ ಮಾಹಿತಿಯನ್ನು ವಿಚಾರಣೆ ವೇಳೆ ಬಹಿರಂಗಪಡಿಸಬೇಕಿದ್ದರೆ, ಅದನ್ನು ನ್ಯಾಯಾಲಯವೇ ನಿರ್ಧರಿಸಬೇಕು. ಇದಕ್ಕೂ ಮುನ್ನ ಮಾಹಿತಿಯನ್ನು ಸಾರ್ವಜನಿಕಗೊಳಿಸಬೇಕಿದ್ದರೆ ತನಿಖಾಧಿಕಾರಿಗಳು ಕಡ್ಡಾಯವಾಗಿ ನ್ಯಾಯಾಲಯದ ಅನುಮತಿ ಪಡೆದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ: ಖಾಸಗೀಕರಣ ವಿರೋಧಿಸಿ ರಾಜ್ಯವ್ಯಾಪಿ ಬ್ಯಾಂಕ್ ನೌಕರರ ಪ್ರತಿಭಟನೆ: ಇಲ್ಲಿದೆ ಜಿಲ್ಲಾವಾರು ಮಾಹಿತಿ..
ಆರೋಪಿಗಳ ಸ್ಮಾರ್ಟ್ಫೋನ್, ಲ್ಯಾಪ್ಟಾಪ್ ಅಥವಾ ಇಮೇಲ್ ಅಕೌಂಟ್ ಪರಿಶೀಲಿಸುವ ಮುನ್ನ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದುಕೊಳ್ಳುವುದು ಕಡ್ಡಾಯ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿನ ಪ್ರಮುಖ ಆರೋಪಿ ವೀರೇನ್ ಖನ್ನಾ ತನ್ನನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲು ನೀಡಿದ್ದ ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ತೀರ್ಪಿನಲ್ಲಿ ಈ ಅಂಶಗಳನ್ನು ಉಲ್ಲೇಖಿಸಿದೆ.