ಬೆಂಗಳೂರು : ಓಲಾ, ಉಬರ್ ಸೇರಿದಂತೆ ಆ್ಯಪ್ ಆಧಾರಿತ ಕ್ಯಾಬ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಜತೆ ಕ್ಯಾಬ್ ಚಾಲಕರು ಅನುಚಿತವಾಗಿ ವರ್ತಿಸುವ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ವರದಿ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ವಕೀಲ ಆರ್.ವಿ.ರಾಮರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಯ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರ ಪರ ವಕೀಲರು ವಾದಿಸಿ, ಆ್ಯಪ್ ಆಧಾರಿತ ಓಲಾ, ಉಬರ್ ಕ್ಯಾಬ್ಗಳ ಚಾಲಕರು ಪ್ರಯಾಣಿಕರ ಜೊತೆ ಬಹಳಷ್ಟು ಅನುಚಿತ ವರ್ತನೆ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಆದರೆ, ಕೆಲವೊಂದು ಪ್ರಕರಣದಲ್ಲಿ ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಈ ವೇಳೆ ನ್ಯಾಯಾಲಯ ಕರ್ನಾಟಕ ಆನ್-ಡಿಮಾಂಡ್ ಟ್ರಾನ್ಸ್ಪೋರ್ಟೇಶನ್ ಟೆಕ್ನಾಲಜಿ ಅಗ್ರಿಗೇಟರ್ಸ್ ರೂಲ್ಸ್-2016ರ ಅನುಸಾರ ಪ್ರಯಾಣಿಕರ ಜೊತೆಗೆ ಅನುಚಿತವಾಗಿ ವರ್ತಿಸಿರುವ ಅಷ್ಟೂ ಚಾಲಕರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿಕೆ ಮಾಡಿದೆ.