ಬೆಂಗಳೂರು : ಇತ್ತೀಚೆಗೆ ನಗರದಲ್ಲಿ ಆಯೋಜಿಸಿದ್ದ ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ ಮತ್ತು ಮುಂದೆ ನಡೆಸುವ ಏರ್ ಶೋ ಸಂದರ್ಭದಲ್ಲೂ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿ ಭಾರತೀಯ ವಾಯುಪಡೆ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ.
2019ರ ಫೆಬ್ರವರಿಯಲ್ಲಿ ಯಲಹಂಕ ವಾಯು ನೆಲೆಯಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಏರ್ ಶೋ ವೇಳೆ ಸಂಭವಿಸಿದ್ದ ಅಗ್ನಿ ಅವಘಡವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ ವಿ ಅತ್ರಿ ಹಾಗೂ ವಕೀಲೆ ಗೀತಾ ಮಿಶ್ರಾ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಓದಿ: ಮ್ಯಾನ್ಹೋಲ್ ಸ್ವಚ್ಛ ಪದ್ಧತಿ ತಡೆಯಲು ಸ್ಥಳೀಯ ಸಂಸ್ಥೆಗಳಿಗೆ ಆದೇಶಿಸಿ: ಸರ್ಕಾರಕ್ಕೆ ಹೈಕೋರ್ಟ್ ತಾಕೀತು
ಇಂದು ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ವಾಯುಪಡೆ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿದರು.
ಅಲ್ಲದೆ, 2019ರ ಏರ್ ಶೋ ವೇಳೆ ನಡೆದ ಅಗ್ನಿ ಅವಘಡದಲ್ಲಿ ಹಾನಿಗೊಳಗಾದ ವಾಹನಗಳ ಪೈಕಿ ವಿಮೆ ಹೊಂದಿಲ್ಲದ 35 ವಾಹನಗಳನ್ನು ಬಿಟ್ಟು ಉಳಿದೆಲ್ಲ ವಾಹನಗಳಿಗೂ ಪರಿಹಾರ ಕಲ್ಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವಿವರಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಈ ವಿಚಾರದಲ್ಲಿ ಹೆಚ್ಚಿನ ನಿರ್ದೇಶನ ನೀಡುವ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತು.