ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಅವರೇನು ಪುಕ್ಕಟ್ಟೆ ಅಕ್ಕಿ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ. ನಮ್ಮಿಂದ ತಗೋತಿದ್ದರು. ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕನ್ನಡ ಜನತೆ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ ಎಂದು ಸಿಎಂ ಪ್ರಶ್ನಿಸಿದರು.
![Innaguration Direct cash transfer to Annabhagya beneficiaries](https://etvbharatimages.akamaized.net/etvbharat/prod-images/10-07-2023/18963542_meeg.jpg)
ಹಸಿದ ಹೊಟ್ಟೆಗೆ, ದುಡಿಯುವ ಕೈಗಳಿಗೆ ಶಕ್ತಿ-ಚೈತನ್ಯ ತುಂಬುವ ಸಲುವಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಮೊದಲು ಅಕ್ಕಿ ಕೊಡುವುದಾಗಿ ಒಪ್ಪಿಕೊಂಡಿದ್ದ ಕೇಂದ್ರ ಸರ್ಕಾರ ಏಕಾಏಕಿ ಬಂದ್ ಮಾಡಿದ್ದೇಕೆ? ಬಡವರು ಎರಡು ಹೊತ್ತು ಅನ್ನ ತಿಂದರೆ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಏಕೆ ಹೊಟ್ಟೆ ಕಿಚ್ಚು? ಎಂದು ಹರಿಹಾಯ್ದರು.
4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು-ಮಧ್ಯಮ ವರ್ಗದವರು ಎರಡು ಹೊತ್ತು ತಿಂದರೆ ಬಿಜೆಪಿಗೆ ಏನು ಹೊಟ್ಟೆಯುರಿ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ನಿಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ, ನೆಮ್ಮದಿಯ ಬದುಕು ನಿರ್ವಹಿಸಿ ಎಂದು ಜನತೆಗೆ ಕರೆ ನೀಡಿದರು.
![Innaguration Direct cash transfer to Annabhagya beneficiaries](https://etvbharatimages.akamaized.net/etvbharat/prod-images/10-07-2023/18963542_meg.jpg)
ನೆಮ್ಮದಿಯ ಬದುಕಿಗೆ ಆಹಾರ ಭದ್ರತೆ ಅನ್ನಭಾಗ್ಯ ಎನ್ನುವ ಘೋಷವಾಕ್ಯದಲ್ಲಿ ಚಾರಿತ್ರಿಕವಾದ ಕಾರ್ಯಕ್ರಮಕ್ಕೆ ಸರ್ಕಾರ ರಚನೆಯಾಗಿ 50ನೇ ದಿನಕ್ಕೆ ಚಾಲನೆ ನೀಡಲಾಯಿತು. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅನ್ನಭಾಗ್ಯದ ಲೋಗೋ ಬಿಡುಗಡೆ ಮಾಡಿದರು. ಯೋಜನೆಯ ಮಾಹಿತಿ ಪತ್ರವನ್ನು ಆರೋಗ್ಯ ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ರಾಮಲಿಂಗಾರೆಡ್ಡಿ, ಬಿ ಎಸ್ ಸುರೇಶ್, ಹೆಚ್ ಕೆ ಪಾಟೀಲ್ ಸೇರಿ ಹಲವು ಸಚಿವರು ಮತ್ತು ಶಾಸಕರುಗಳು ಉಪಸ್ಥಿತರಿದ್ದರು.
ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಮೊದಲಿಗೆ ಹಣ ವರ್ಗಾವಣೆ ಮಾಡಲಾಯಿತು. ನಾಳೆಯಿಂದ ಪ್ರತಿದಿನ ಹಂತ ಹಂತವಾಗಿ ರಾಜ್ಯದ ಸರ್ವ ಫಲಾನುಭವಿಗಳಿಗೂ ಹಣ ವರ್ಗಾವಣೆ ಆಗಲಿದೆ. ಡಿಬಿಟಿ ಬಳಿಕ ಯೋಜನೆಯ ಪ್ರಚಾರ ವಿಡಿಯೋವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು. 10 ವರ್ಷಗಳ ಹಿಂದೆ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಿದ್ದರು. ಬಸವ ಜಯಂತಿಯಂದು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಅವರು, "ಬಸವಣ್ಣನವರ ದಾಸೋಹ ಸಂಸ್ಕೃತಿಯಂತೆ ಹಸಿವು ಮುಕ್ತ ಕರ್ನಾಟಕ ಮಾಡುವ ತಮ್ಮ ಜೀವಮಾನದ ಆಶಯ ಮತ್ತು ಕಾಳಜಿಯ ಭಾಗವಾಗಿ ಅನ್ನಭಾಗ್ಯ ಯೋಜನೆಯನ್ನು ಘೋಷಿಸಿದ್ದರು.
ಇದನ್ನೂ ಓದಿ: ಭರವಸೆ ಇಟ್ಟು ಜನ ಬಹುಮತ ನೀಡಿದ್ದಾರೆ, ಜವಾಬ್ದಾರಿ ಅರಿತು ಕೆಲಸ ಮಾಡಿ: ಸರ್ಕಾರಕ್ಕೆ ಪ್ರತಾಪ್ ಸಿಂಹ ನಾಯಕ್ ಕಿವಿ ಮಾತು