ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ನಡೆಯಲಿರುವ ಸರ್ಕಾರಿ ಕಾರ್ಯಕ್ರಮ ಮತ್ತು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ಪಕ್ಷದ ಚುನಾವಣಾ ಟಾಸ್ಕ್ ಪರಿಶೀಲನೆ ನಡೆಸಲಿದ್ದು, ರಾಜ್ಯ ನಾಯಕರಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಿದ್ದಾರೆ.
ಜನವರಿ 27 ರ ರಾತ್ರಿ 10.30 ಕ್ಕೆ ಹುಬ್ಬಳ್ಳಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂದು ರಾತ್ರಿ ಹುಬ್ಬಳ್ಳಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಪಕ್ಷದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ. ಕಳೆದ ಬಾರಿ ಮಂಡ್ಯ ಮತ್ತು ಬೆಂಗಳೂರು ಪ್ರವಾಸಕ್ಕೆ ಆಗಮಿಸಿದ್ದ ವೇಳೆ ರಾಜ್ಯದ ನಾಯಕರಿಗೆ ಕೆಲವೊಂದು ಟಾಸ್ಕ್ ನೀಡಿದ್ದು. ಅದರ ಪ್ರಗತಿ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಚುನಾವಣಾ ಸಿದ್ಧತೆಗೆ ಸಂಬಂಧಪಟ್ಟಂತೆ ಮಹತ್ವದ ಸಭೆ ನಡೆಸಿ ಪ್ರಚಾರ ತಂತ್ರದ ಕುರಿತು ಮಾತುಕತೆ ನಡೆಸಲಿದ್ದಾರೆ. ಜನವರಿ 28 ರಂದು ಬೆಳಗ್ಗೆ 11 ಗಂಟೆಗೆ ಕೆಎಲ್ಇ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ, ಬಳಿಕ ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸರ್ಕಾರಿ ಕಾರ್ಯಕ್ರಮದ ನಂತರ ಪಕ್ಷದ ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. 28 ರಂದು ಮಧ್ಯಾಹ್ನ 1 ಗಂಟೆಗೆ ಕುಂದಗೋಳದಲ್ಲಿ ನಡೆಯಲಿರುವ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು, ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಯಲ್ಲಿ ಸಂಜೆ 4 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದ್ದು, ಬೈಲಹೊಂಗಲ, ಕಿತ್ತೂರು, ಖಾನಾಪುರ ಕ್ಷೇತ್ರ ವ್ಯಾಪ್ತಿ ಕೇಂದ್ರೀಕರಿಸಿ ಆಯೋಜಿಸಿರುವ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಅಮಿತ್ ಶಾ ರಾಜ್ಯ ಪ್ರವಾಸದ ಹಿನ್ನಲೆಯಲ್ಲಿ ಕಾರ್ಯಕ್ರಮಗಳ ಸಿದ್ಧತಾ ಕಾರ್ಯದ ಕುರಿತು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥಭವನದಲ್ಲಿ ಪದಾಧಿಕಾರಿಗಳ ಸಭೆ ನಡೆಸಲಾಯಿತು. ವಿಜಯ ಸಂಕಲ್ಪ ಯಾತ್ರೆಗೆ ಮಾಡಿಕೊಂಡಿರುವ ಸಿದ್ಧತೆಗಳು ಮತ್ತು ಸಮಾವೇಶ ಆಯೋಜನೆ ಕುರಿತು ನಡೆದಿರುವ ತಯಾರಿಗಳ ಕುರಿತು ಪರಿಶೀಲನೆ ನಡೆಸಲಾಯಿತು. ಅಮಿತ್ ಶಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ಚರ್ಚಿಸಲಾಯಿತು. ಮೋದಿ ಕಾರ್ಯಕ್ರಮದ ಯಶಸ್ಸಿನಂತೆ ಅಮಿತ್ ಶಾ ಕಾರ್ಯಕ್ರಮವನ್ನೂ ಯಶಸ್ವಿಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಇತ್ತೀಚೆಗೆ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಪಕ್ಷದ ಪ್ರಮುಖರ ಸಭೆಯಲ್ಲಿಯೂ ಅಮಿತ್ ಶಾ ಪ್ರವಾಸದ ಕುರಿತು ಮಾತುಕತೆ ನಡೆಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಆಯ್ದ ಪ್ರಮುಖರು ಸಭೆ ನಡೆಸಿ ಅಮಿತ್ ಶಾ ಪ್ರವಾಸದ ವೇಳೆ ಆಯೋಜನೆ ಮಾಡಲಿರುವ ಕಾರ್ಯಕ್ರಮಗಳ ರೂಪುರೇಷೆ ಕುರಿತು ಚರ್ಚಿಸಿ ಕಾರ್ಯಕ್ರಮ ಆಯೋಜನೆಗೆ ಬೇಕಾದ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾ ಘಟಕಗಳಿಗೆ ಸೂಚನೆ ನೀಡಿದ್ದರು ಅದರಂತೆ ಇಂದಿನ ಸಭೆಯಲ್ಲಿ ತಯಾರಿಯ ಕುರಿತು ಪರಿಶೀಲನೆ ನಡೆಸಲಾಯಿತು.
ಅಮಿತ್ ಶಾ ಕಾರ್ಯಕ್ರಮದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ಜನವರಿ 28 ರಂದು ರಾಜ್ಯದಲ್ಲಿ ಅಮಿತ್ ಶಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬೆಳಗಾವಿಯಲ್ಲಿ ಸಾರ್ವಜನಿಕ ಸಭೆ ಮತ್ತು ಪಕ್ಷದ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಜನವರಿ 28ಕ್ಕೆ ಅಮಿತ್ ಶಾರಿಂದ ಅಮೃತ ಮಹೋತ್ಸವ ಉದ್ಘಾಟನೆ: ಹುಬ್ಬಳ್ಳಿಯಲ್ಲಿ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ಮಾಧ್ಯಗೋಷ್ಟಿ ನಡೆಸಿ, ಕೆಎಲ್ಇ ಸಂಸ್ಥೆಯ ಬಿ.ಬಿ. ಭೂಮರಡ್ಡಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಅಮೃತ ಮಹೋತ್ಸವ ಹಾಗೂ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ ಜ. 28ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, 28ರಂದು ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಮೃತ ಮಹೋತ್ಸವದ ಅಂಗವಾಗಿ ಕಾಲೇಜಿನ ಆವರಣದಲ್ಲಿ ₹25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗವನ್ನು ಅಮಿತ್ ಶಾ ಉದ್ಘಾಟಿಸಲಿದ್ದು. ಜನವರಿ 29ರಂದು ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮವಿದ್ದು, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಹಾಗೂ ‘3 ಈಡಿಯಟ್ಸ್’ ಸಿನಿಮಾ ಖ್ಯಾತಿಯ ಎಂಜಿನಿಯರ್ ಸೋನಂ ವಾಂಗ್ಚುಕ್ ಭಾಗವಹಿಸಲಿದ್ದಾರೆ ಎಂದರು.
ಇದನ್ನೂ ಓದಿ: ಶಿಕ್ಷಣ ಕಾಶಿಗೆ ಮತ್ತೊಂದು ಗರಿ: ಧಾರವಾಡದಲ್ಲಿ ಸ್ಥಾಪನೆಯಾಗಲಿದೆ ವಿಧಿವಿಜ್ಞಾನ ಯುನಿವರ್ಸಿಟಿ