ಬೆಂಗಳೂರು: ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೇಸ್ಕೋರ್ಸ್ ರಸ್ತೆಯಲ್ಲಿರುವ ತಾಜ್ವೆಸ್ಟ್ ಎಂಡ್ ಹೋಟೆಲ್ನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಲೋಕಸಭಾ ಚುನಾವಣೆ ನಂತರ ನಡೆಯುತ್ತಿರುವ ಪ್ರಥಮ ಸಭೆ ಇದಾಗಿದೆ. ಇದರಲ್ಲಿ ಪಕ್ಷದ ಪ್ರಮುಖರು ಪಾಲ್ಗೊಂಡು ಚರ್ಚೆ ನಡೆಸಲಿದ್ದಾರೆ ಎಂದರು.
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡುವುದಾಗಿ ಘೋಷಿಸಿದ ನಂತರ ನಡೆಯುತ್ತಿರುವ ಈ ಸಭೆಯಲ್ಲಿ ಪಕ್ಷದ ಶಾಸಕರನ್ನ ವಿಶ್ವಾಸದಲ್ಲಿರಿಸಿಕೊಳ್ಳುವ ಸಂಬಂಧ ಯೋಜನೆ ರೂಪಿಸಲಾಗುತ್ತಿದೆ. ಶಾಸಕರು ಯಾರೂ ಆಮಿಷಕ್ಕೆ ಬಲಿಯಾಗಬಾರದು. ಆಪರೇಷನ್ ಕಮಲ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಿ ಎಂಬ ಸಂದೇಶ ನೀಡುವ ಸಾಧ್ಯತೆ ಹೆಚ್ಚಿದೆ. ಬಿಜೆಪಿಯಿಂದ ಆಫರ್ ಬಂದರೆ ತಕ್ಷಣವೇ ತಿಳಿಸಿ ಎಂದು ಶಾಸಕರಿಗೆ ಸೂಚನೆ ನೀಡಲಿರುವ ಶಾಸಕಾಂಗ ಪಕ್ಷದ ನಾಯಕ ಸಿಎಂ ಕುಮಾರಸ್ವಾಮಿ, ಎಲ್ಲರೂ ಜೊತೆಗಿರುವಂತೆ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದ್ದು, ಚುನಾವಣೆ ಫಲಿತಾಂಶದ ಬಗ್ಗೆಯೂ ಚರ್ಚೆ ನಡೆಯಲಿದೆ.
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯುವ ಮೂಲಕ ಸಾಕಷ್ಟು ಕುತೂಹಲ, ಅಚ್ಚರಿ ಮೂಡಿಸಿದ್ದು, ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ಹೆಣೆಯುವ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ.