ಬೆಂಗಳೂರು : ಕಲಬುರ್ಗಿ, ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣಾ ಕಾವು ಹೆಚ್ಚುತ್ತಿದೆ. ಆಡಳಿತಾರೂಢ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ಈ ಚುನಾವಣೆಗಳು, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ದೊಡ್ಡ ಸವಾಲಾಗಿವೆ. ಅಲ್ಲದೆ, ಕಮಲಪಾಳಕ್ಕೆ ಟಕ್ಕರ್ ನೀಡಲು ಕಾಂಗ್ರೆಸ್ ಕೂಡ ಪಣತೊಟ್ಟಿದೆ. ಈ ಎರಡು ಪಕ್ಷಗಳ ನಡುವೆ ಜೆಡಿಎಸ್ ನಿಗೂಢ ನಡೆ ಇಟ್ಟಿದೆ.
ಕಲಬುರ್ಗಿ, ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಚುನಾವಣೆಯನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇದರ ಜೊತೆಗೆ ಚುನಾವಣೆ ಉಸ್ತುವಾರಿಗಳನ್ನೂ ನೇಮಕ ಮಾಡಿವೆ. ಆದರೆ, ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಪ್ರಾಬಲ್ಯ ಸ್ಥಾಪಿಸುವುದಾಗಿ ಹೇಳುತ್ತಿರುವ ಜೆಡಿಎಸ್ ನಾಯಕರು, ಈ ಮೂರೂ ಮಹಾನಗರ ಪಾಲಿಕೆಯಲ್ಲೂ ತನ್ನ ಶಕ್ತಿ ಪ್ರದರ್ಶನಕ್ಕೆ ಮುಂದಾಗಿಲ್ಲ.
ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಪೈಪೋಟಿ ನೀಡುವಷ್ಟು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಧ್ಯವಾಗಿಲ್ಲ. ಮೂಲಗಳ ಪ್ರಕಾರ, ಮೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಸ್ಥಳೀಯ ನಾಯಕರ ಹೆಗಲಿಗೆ ಬಿಡಲಾಗಿದೆ. ಹಾಗಾಗಿ, ಸ್ಥಳಿಯ ನಾಯಕರು ಹಾಗೂ ಜಿಲ್ಲಾಧ್ಯಕ್ಷರು ಸೇರಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ 65-70 ವಾರ್ಡ್ಗಳಿಗೆ ಅಭ್ಯರ್ಥಿಗಳನ್ನು ಹಾಕಿದ್ದೇವೆ. ಕಲಬುರ್ಗಿಯಲ್ಲಿ ಎಲ್ಲ ವಾರ್ಡ್ಗಳಿಗೂ ಅಭ್ಯರ್ಥಿಗಳನ್ನು ಹಾಕಿದ್ದೇವೆ. ಆದರೆ, ಬೆಳಗಾವಿಯಲ್ಲಿ ನಮಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರೇ ಹೇಳಿದ್ದಾರೆ.
ಮೂರು ಮಹಾನಗರ ಪಾಲಿಕೆ ಚುನಾವಣೆಗೆ ಅನೇಕ ವಾರ್ಡ್ಗಳಲ್ಲಿ ಸ್ಪರ್ಧಿಸಲು ಜೆಡಿಎಸ್ಗೆ ಅಭ್ಯರ್ಥಿಗಳೇ ಸಿಕ್ಕಿಲ್ಲ ಎನ್ನಲಾಗಿದೆ. ಈ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಸೆಡ್ಡು ಹೊಡೆಯುತ್ತದೆಯೇ ಎಂಬ ಪ್ರಶ್ನೆ ಮೂಡಿದೆ. ಆದರೆ, ಜೆಡಿಎಸ್ನ ರಾಜಕೀಯ ಲೆಕ್ಕಾಚಾರವೇ ಬೇರೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ ಮಹಾನಗರ ಪಾಲಿಕೆಯ 58, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82, ಕಲಬುರ್ಗಿ ಮಹಾನಗರ ಪಾಲಿಕೆಯ 55 ವಾರ್ಡ್ಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು.