ಬೆಂಗಳೂರು : ನಾಳೆ ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಈ ವೇಳೆ ಮೂವರು ಸಾಧಕರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಮೂವರು ಸಾಧಕರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡುತ್ತಿದ್ದೇವೆ. ಈ ಸಂಬಂಧ ಬಿ.ಎಲ್. ಶಂಕರ್ ನೇತೃತ್ವದ ಸಮಿತಿ ನೇಮಕ ಮಾಡಲಾಗಿತ್ತು. ಈ ಸಮಿತಿ ಮೂವರು ಸಾಧಕರನ್ನು ಆಯ್ಕೆ ಮಾಡಿದೆ ಎಂದು ಹೇಳಿದರು.
ಸಾಮಾಜಿಕ ಕಳಕಳಿ ಹೊಂದಿರುವ ಯುವ ಉದ್ಯಮಿ ನಿತಿನ್ ಕಾಮತ್, ಟೋಕಿಯೊ ಒಲಂಪಿಕ್ನಲ್ಲಿ 4ನೇ ಸ್ಥಾನ ಪಡೆದ ಅಂತಾರಾಷ್ಟ್ರೀಯ ಗಾಲ್ಫರ್ ಅದಿತಿ ಅಶೋಕ್ ಮತ್ತು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಈ ಬಾರಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಈ ಪ್ರಶಸ್ತಿಯು 5 ಲಕ್ಷ ರೂ ನಗದು ಹೊಂದಿರುತ್ತದೆ ಎಂದು ತಿಳಿಸಿದರು.
ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಡಾ. ಮಂಜುನಾಥ್ ಅವರಿಂದ ಹಿಡಿದು ಕಸ ಗುಡಿಸುವ ಕೆಲಸಗಾರರವರೆಗೂ ಎಲ್ಲರೂ ಸೇವೆ ಸಲ್ಲಿಸಿದ್ದು, ಹೀಗಾಗಿ ಈ ಸಂಸ್ಥೆಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಸುಮಾರು 1600 ಬೆಡ್ ಸೌಲಭ್ಯ ಹೊಂದಿರುವ ಆಸ್ಪತ್ರೆಯು ಬಹಳ ಕಡಿಮೆ ದರದಲ್ಲಿ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಸೇವೆ ನೀಡುತ್ತಾ ಬಂದಿದೆ ಎಂದು ಹೇಳಿದರು.
ಕಿರಿಯ ವಯಸ್ಸಿನಲ್ಲೇ ಜೀರೋಧ ಎಂಬ ನವೋದ್ಯಮ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಬೆಳೆದಿರುವ ನಿತಿನ್ ಕಾಮತ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅವರು ನವೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಈ ಸಂಸ್ಥೆಯಿಂದ ಬರುವ 25% ರಷ್ಟು ದುಡಿಮೆ ಹಣವನ್ನು ಸಾಮಾಜಿಕ ಸೇವೆಗೆ ಮುಡಿಪಿಟ್ಟಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲದೆ ಬೆಂಗಳೂರಿನ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಕೂಡ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅದಿತಿ ಅಶೋಕ್ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನ ಪಡೆದು ದೇಶಕ್ಕೆ ಕೀರ್ತಿ ತಂದಿದ್ದರು. ಅದಿತಿ ಅಶೋಕ್ ವಿಶ್ವ ಗಾಲ್ಫ್ ಕ್ರೀಡೆಯಲ್ಲಿ ಎತ್ತರದ ಸಾಧನೆ ಮಾಡಿರುವ ಆಟಗಾರ್ತಿ ಎಂದು ಹೇಳಿದರು.
ಈ ಬಾರಿ ಆರೋಗ್ಯ, ಉದ್ದಿಮೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಈ ಮೂವರು ವ್ಯಕ್ತಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಸಾಧಕರಿಗೆ ನಾಳೆ ವಿಧಾನಸೌಧದಲ್ಲಿ ನಡೆಯಲಿರುವ 514ನೇ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಳೆದ ಸರ್ಕಾರ ಹಾಸನದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿತ್ತು. ಅದಕ್ಕೆ ಅಡ್ಡಿಪಡಿಸಲು ನಾನು ಇಚ್ಛಿಸುವುದಿಲ್ಲ. ಬೆಂಗಳೂರಿನ ಕಾರ್ಯಕ್ರಮ ಮುಗಿಸಿ ನಂತರ ಹಾಸನದ ಕಾರ್ಯಕ್ರಮಕ್ಕೆ ತೆರಳುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ : ನೂರು ಸಾಧಕರ ಮುಡಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ... ಚಂಪಾ, ಮುಖ್ಯಮಂತ್ರಿ ಚಂದ್ರು, ಈಟಿವಿ ಭಾರತಕ್ಕೂ ಪ್ರಶಸ್ತಿ ಗರಿ