ದೇವನಹಳ್ಳಿ(ಬೆಂ.ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಇಂದು ಉದ್ಘಾಟಿಸಲಾಯಿತು.
ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಉದ್ಘಾಟಿಸಿ, ಬಸ್ಗಳಿಗೆ ಹಸಿರು ನಿಶಾನೆ ತೋರಿದರು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು, ಇದು ಎಲ್ಲಾ ವಿಮಾನ ನಿಲ್ದಾಣಗಳಿಗಿಂತ ವಿಭಿನ್ನವಾಗಿದೆ. ಅತಿ ದೊಡ್ದ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು ಬಿಎಂಟಿಸಿ ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್ಗಳ ಸೇವೆಯನ್ನು ಕಲ್ಪಿಸಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ಗಳನ್ನು ನೀಡಲು ಸಚಿವರು ಒಪ್ಪಿಗೆ ನೀಡಿದ್ದಾರೆ.
ದೇವನಹಳ್ಳಿ ತಾಲೂಕಿನ ತೂಬಗೆರೆ ಪಂಚಾಯತಿಗೆ ಬಸ್ಗಳ ಅನಾನುಕೂಲತೆ ಇರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸಲು ಸಾರಿಗೆ ಸಚಿವರಿಗೆ ಮನವಿ ನೀಡಲಾಯಿತು. ದೊಡ್ಡಬಳ್ಳಾಪುರ ತಾಲೂಕಿನ ಎಸ್ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಬಸ್ ವ್ಯವಸ್ಥೆಗಳು ಹಾಗೂ ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ, ಮುಖ್ಯ ಕಾರ್ಯನಿರ್ವಾಹಕ ಸತ್ಯಕಿ ರಘುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್. ಹಾಗೂ ವಿಮಾನ ನಿಲ್ದಾಣ ಹಾಗೂ ಸಾರಿಗೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ:ಸಿರಿಧಾನ್ಯಗಳನ್ನು ಬೆಳೆಸಿ ಮತ್ತು ಬಳಸಿ: ಡಾ. ಹೆಚ್ ಸಿ ಮಹದೇವಪ್ಪ