ಬೆಂಗಳೂರು: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಬಿಜೆಪಿ ಆರಂಭಿಸಿದೆ. ಇಂದು ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.
ಡಾ. ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಮತ್ತು ಸಚಿವ ಸಿ.ಎಸ್. ಶಿವಳ್ಳಿ ಅಕಾಲಿಕ ನಿಧನದಿಂದ ತೆರವಾಗಿರುವ ಕುಂದಗೋಳ ಕ್ಷೇತ್ರಕ್ಕೆ ಮೇ 19 ರಂದು ಉಪ ಚುನಾವಣೆಗೆ ನಡೆಯಲಿದೆ. ಇದಕ್ಕಾಗಿ ಬಿಜೆಪಿ ಸಿದ್ಧತೆ ಆರಂಭಿಸಿದೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಬೈ ಎಲೆಕ್ಷನ್ ಅಖಾಡಕ್ಕಿಳಿಸಲು ಇಂದು ಅಭ್ಯರ್ಥಿಗಳ ಆಯ್ಕೆಗಾಗಿ ಸಭೆ ಕರೆಯಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆಯಲ್ಲಿ ಉಭಯ ಕ್ಷೇತ್ರಗಳ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದೆ ಎನ್ನಲಾಗ್ತಿದೆ.
ಕಳೆದ ಬಾರಿ ಕುಂದಗೋಳ ಕ್ಷೇತ್ರದಲ್ಲಿ 634 ಮತಗಳ ಅಲ್ಪ ಅಂತರದಲ್ಲಿ ಪರಾಭವಗೊಂಡಿದ್ದ ಬಿಜೆಪಿಯ ಚಿಕ್ಕನಗೌಡ ಹಾಗೂ ಚಿಂಚೋಳಿಯಲ್ಲಿ 19 ಸಾವಿರದಷ್ಟು ಮತಗಳ ಅಂತರದಲ್ಲಿ ಪರಾಭವಗೊಂಡಿದ್ದ ಸುನೀಲ್ ವಲ್ಯಾಪುರೆ ಅವರನ್ನೇ ಕಣಕ್ಕಿಳಿಸಬೇಕು ಎನ್ನುವ ಒಲವನ್ನು ರಾಜ್ಯ ನಾಯಕರು ಹೊಂದಿದ್ದಾರೆ ಎನ್ನಲಾಗ್ತಿದೆ. ಈ ಸಂಬಂಧ ಇಂದಿನ ಸಭೆಯಲ್ಲಿ ಅಂತಿಮ ಚರ್ಚೆ ನಡೆಯಲಿದೆ.
ಪರಾಜಿತ ಅಭ್ಯರ್ಥಿಗಳಿಗೆ ಮಣೆ ಹಾಕಬೇಕೊ ಅಥವಾ ಹೊಸಬರಿಗೆ ಅವಕಾಶ ನೀಡಬೇಕೊ ಎನ್ನುವ ಕುರಿತು ಈ ಸಭೆಯಲ್ಲಿ ನಿರ್ಧಾರ ಕೈಗೊಂಡು ರಾಜ್ಯ ಕೋರ್ ಕಮಿಟಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಿದೆ.
ಈ ಸಭೆ ಕುರಿತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಖಚಿತಪಡಿಸಿದ್ದು, ಕಲಬುರಗಿ ಹಾಗೂ ಧಾರವಾಡ ಜಿಲ್ಲೆಯ ನಾಯಕರನ್ನು ಕರೆದು ಚರ್ಚೆ ನಡೆಸಲಾಗುತ್ತದೆ. ನಂತರ ಕೋರ್ ಕಮಿಟಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೈ ಎಲೆಕ್ಷನ್ ಯಾವಾಗ?:
ಎರಡು ಕ್ಷೇತ್ರಗಳಿಗೆ ಮೇ19ರಂದು ಮತದಾನ ನಡೆಯಲಿದ್ದು, ಏ.29 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಏ.30ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಸಲಿದ್ದು, ಮೇ.02ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದೆ. ಮೇ 19 ರಂದು ಚುನಾವಣೆ ನಡೆಯಲಿದ್ದು, ಮೇ .23ರಂದು ಲೋಕಸಭಾ ಚುನಾವಣಾ ಫಲಿತಾಂಶದ ದಿನವೇ ಈ ಕ್ಷೇತ್ರಗಳ ಫಲಿತಾಂಶವನ್ನ ಪ್ರಕಟಿಸಲಾಗುತ್ತದೆ.