ಬೆಂಗಳೂರು : ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಹೈಕಮಾಂಡ್ ಅಂತಹ ಯಾವುದೇ ತೀರ್ಮಾನ ಮಾಡುವುದಿಲ್ಲ. ಬಿ ಎಸ್ ಯಡಿಯೂರಪ್ಪನವರೇ ಪೂರ್ಣಾವಧಿ ಪೂರೈಸುತ್ತಾರೆ ಎಂದು ಸಂಸದ ಬಿ ಎನ್ ಬಚ್ಚೇಗೌಡ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಲು ಬಂದಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆಯ ಪರಿಸ್ಥಿತಿ ರಾಜ್ಯದಲ್ಲಿಲ್ಲ. ವರಿಷ್ಠರು ತೀರ್ಮಾನ ಮಾಡಿದರೆ ಮಾಡಬಹುದು. ಆದರೆ, ಯಡಿಯೂರಪ್ಪನವರು ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ರಾಷ್ಟ್ರಮಟ್ಟದ ನಾಯಕರು ಬಹಳ ಎಚ್ಚರಿಕೆಯಿಂದ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ದಕ್ಷಿಣ ಭಾರತದಲ್ಲಿ ಅದರಲ್ಲೂ ನಮ್ಮ ರಾಜ್ಯದಲ್ಲಿ ಮಾತ್ರ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ, ಹೈಕಮಾಂಡ್ ಎಚ್ಚರಿಕೆಯಿಂದ ತೀರ್ಮಾನ ಮಾಡುತ್ತದೆ ಎಂದು ಹೇಳಿದರು. ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಚ್ಚೇಗೌಡ, ಕಾಂಗ್ರೆಸ್ ಸೇರ್ಪಡೆ ಆಗುವುದು ಅವರಿಗೆ ಬಿಟ್ಟ ವಿಚಾರ. ನಾನು ಬಿಜೆಪಿ ಸಂಸದನಾಗಿದ್ದೇನೆ. ಶರತ್ ಸ್ವಾಭಿಮಾನಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡಿ ಗೆದ್ದಿದ್ದಾರೆ.
ಅವರು ಭವಿಷ್ಯದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ನಾನು ಬಿಜೆಪಿಯಲ್ಲಿದ್ದು, ಇದರ ಬಗ್ಗೆ ಮಾತನಾಡುವುದಿಲ್ಲ ಎಂದರು. ನಾನು ಶರತ್ ಗೆ ಚುನಾವಣೆಯಲ್ಲಿ ಬೆಂಬಲ ನೀಡಿಲ್ಲ. ಎಂಟಿಬಿ ನಾಗರಾಜ್ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ. ಭವಿಷ್ಯದ ರಾಜಕೀಯ ಬಗ್ಗೆ ನಾನು ಮುನ್ಸೂಚನೆ ನೀಡುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಸಿಎಂಗೆ ಬಿಟ್ಟ ವಿಚಾರ : ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದು ವರಿಷ್ಠರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಟ್ಟ ವಿಚಾರ. ಇವತ್ತು ಸಂಜೆ ಅಥವಾ ನಾಳೆ ವೇಳೆಗೆ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಗೊತ್ತಾಗುತ್ತದೆ. ಎಂಟಿಬಿ ನಾಗರಾಜ್ ಅವರಿಗೆ ಮಂತ್ರಿಸ್ಥಾನ ನೀಡುವುದಾದರೆ ನೀಡಬಹುದು. ನನ್ನ ಅಭ್ಯಂತರ ಏನೂ ಇಲ್ಲ. ನಾನು ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ ಎಂದರು.
ಡ್ರಗ್ಸ್ ಸಂಪೂರ್ಣ ನಿರ್ಮೂಲನೆ : ಡ್ರಗ್ಸ್ ಮಾಫಿಯಾ ಸಂಪೂರ್ಣ ನಿರ್ಮೂಲನೆ ಆಗಬೇಕಿದೆ. ಇದು ಇಂದು, ನಿನ್ನೆಯದಲ್ಲ. ಹಿಂದಿನಿಂದಲೂ ಡ್ರಗ್ಸ್ ಮಾಫಿಯಾ ಇದೆ. ಇದನ್ನು ಬೇರು ಸಮೇತ ಕಿತ್ತೊಗೆಯಬೇಕು. ಈ ಬಗ್ಗೆ ಗೃಹ ಸಚಿವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಡ್ರಗ್ಸ್ ಚಟಕ್ಕೆ ಹೆಚ್ಚು ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಡ್ರಗ್ಸ್ ಮಾಫಿಯಾದಲ್ಲಿ ಇದೀಗ ಒಂದೊಂದೇ ಪ್ರಕರಣ ಬೆಳಕಿಗೆ ಬರುತ್ತಿವೆ. ಸಿನಿಮಾ ರಂಗ ಒಂದೇ ಅಲ್ಲ, ಯಾವುದೇ ಕ್ಷೇತ್ರ ಇರಲಿ ಎಲ್ಲವೂ ಬೆಳಕಿಗೆ ಬರಬೇಕಿದೆ ಎಂದರು.