ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೆಲ ಅಭಿವೃದ್ದಿ ಕಾಮಗಾರಿಗಳಿಗೆ ಬಜೆಟ್ನಲ್ಲಿ ಅನುದಾನ ಬಿಡುಗಡೆಯ ಬಗ್ಗೆ ಚರ್ಚಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಸಪ್ಟೆಂಬರ್ ಅಂತ್ಯದೊಳಗೆ ಮುಕ್ತಾಯವಾಗಲಿದೆ. ನಿರ್ವಹಣೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ವತಿಯಿಂದ ಕೈಗೊಳ್ಳಲು ಹಾಗೂ ವಿಮಾನಯಾನ ಮಾರ್ಗಗಳನ್ನು ನಿಗದಿಪಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೇಂದ್ರ ವಿಮಾನಯಾನ ಸಚಿವರಿಗೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಕೋರಿದ್ದಾರೆ.
ಶಿವಮೊಗ್ಗ- ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ (ಶಿಮೂಲ್) ವ್ಯಾಪ್ತಿಯಿಂದ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳನ್ನು ಬೇರ್ಪಡಿಸಿ ಹೊಸದಾಗಿ ಶಿವಮೊಗ್ಗ ಹಾಲು ಒಕ್ಕೂಟವನ್ನು ಪ್ರತ್ಯೇಕವಾಗಿ ಘೋಷಿಸಲು ವಿನಂತಿಸಿದರು. ಶಿಮೂಲ್ ಹಾಲಿನ ಪುಡಿ ತಯಾರಿಕಾ ಘಟಕವನ್ನು ಪ್ರಾರಂಭಿಸಲು ಬಜೆಟ್ನಲ್ಲಿ ₹50 ಕೋಟಿ ಅನುದಾನಕ್ಕೆ ಬೇಡಿಕೆ ಇಟ್ಟರು.
₹30 ಕೋಟಿ ವಿಶೇಷ ಅನುದಾನವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಂಶೋಧನಾ, ಕೌಶಲ್ಯಾಭಿವೃದ್ಧಿ, ವಿಸ್ತರಣಾ ಕೇಂದ್ರ ಮತ್ತು ಉಡುತಡಿ, ಶಿಕಾರಿಪುರ ತಾಲೂಕಿನ ಅಭಿವೃದ್ಧಿಗೆ ಮೀಸಲಿಡುವಂತೆ ಮತ್ತು ಶಿವಮೊಗ್ಗದಲ್ಲಿ ನೂತನವಾಗಿ ಸ್ಥಾಪನೆ ಆಗಿರುವ ಆಯುಷ್ ವಿಶ್ವವಿದ್ಯಾನಿಲಯ ಅಭಿವೃದ್ಧಿಗೆ ರೂ.100 ಕೋಟಿಯನ್ನು ಬಜೆಟ್ನಲ್ಲಿ ಮೀಸಲಿಡಲು ಕೋರಿದರು.
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ವಿಭಾಗಕ್ಕೆ, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಮತ್ತು ಕೇಂದ್ರದ ಪ್ರಾಯೋಜಕತ್ವದ ಎನ್ಎಸ್ಡಿಎಫ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಕ್ರೀಡಾ ಅಕಾಡೆಮಿ ಸ್ಥಾಪಿಸಲು ಬಜೆಟ್ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಗಳಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ.. ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಸರ್ಕಾರ ನಿರ್ಧಾರ