ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಮುಕ್ತಾಯವಾಗುತ್ತಿದ್ದಂತೆ ಇಲಾಖೆಯ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ವಿವಿಧ ಕಾರ್ಯಕ್ರಮಗಳಡಿ ಕಳೆದ ಆರ್ಥಿಕ ಸಾಲಿನಲ್ಲಿ ಸೌಲಭ್ಯಗಳ ಮಂಜೂರಾತಿ ಪಡೆದಿರುವ ಫಲಾನುಭವಿಗಳಿಗೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಸೌಲಭ್ಯಗಳನ್ನು ವಿತರಿಸಲು ಸಿದ್ಧರಾಗುವಂತೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶಿಸಿದರು.
2019-20ನೆ ಸಾಲಿನ ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಟೆಂಡರ್ಗಳನ್ನು ಈ ತಿಂಗಳ ಅಂತ್ಯದೊಳಗೆ ಕರೆಯಲು ಸಜ್ಜಾಗುವಂತೆ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ಕೊಟ್ಟರು.

ಕ್ರೈಸ್ ಸಂಸ್ಥೆಯ ಮೂಲಕ ನಡೆಸಲಾಗುತ್ತಿರುವ ವಸತಿ ಶಾಲೆಗಳ ಮಕ್ಕಳಿಗೆ ಶಾಲೆಯ ಆರಂಭದ ದಿನವೇ ಸಮವಸ್ತ್ರ, ಬ್ಯಾಗ್, ಶೂ, ಸಾಕ್ಸ್, ನೋಟ್ ಪುಸ್ತಕ ಮುಂತಾದ ಲೇಖನ ಸಾಮಗ್ರಿಗಳನ್ನು ವಿತರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸಚಿವರು ಆದೇಶಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾದ ಇ.ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಅನ್ಬುಕುಮಾರ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ತಾಪಕ ನಿರ್ದೇಶಕ ರಘುನಂದನಮೂರ್ತಿ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.