ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಆಡಳಿತ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಇತರರು ವಿಧಾನಸಭೆಯಲ್ಲಿ ಪಕ್ಷಬೇಧ ಮರೆತು ಧರಣಿ ನಡೆಸಿದರು.
ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ವಿಷಯ ಪ್ರಸ್ತಾಪಿಸಿ, ಪಂಚಮಸಾಲಿ, ಕುರುಬ, ಗಂಗಾಮತಸ್ಥ ಸಮುದಾಯಗಳಿಗೆ ಮೀಸಲಾತಿಯನ್ನು ಸರ್ಕಾರ ಯಾವಾಗ ಕೊಡಲಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಆಗ ಸಚಿವರಿಂದ ಸರಿಯಾದ ಉತ್ತರ ಬಾರದಿದ್ದಾಗ, ಮೊದಲು ಯತ್ನಾಳ್ ಸದನದ ಬಾವಿಗೆ ಇಳಿದು ಧರಣಿ ಆರಂಭಿಸಿದರು. ಪಕ್ಷಬೇಧ ಮರೆತು ಬಂಡೆಪ್ಪ ಕಾಶಂಪೂರ, ಡಾ. ಯತೀಂದ್ರ ಸಿದ್ದರಾಮಯ್ಯ, ತುಕಾರಾಂ, ಅರವಿಂದ್ ಬೆಲ್ಲದ್ ಸೇರಿ ಆ ಸಮುದಾಯದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಯತ್ನಾಳ್ಗೆ ಸಾಥ್ ನೀಡಿದರು.
ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ 80 ಲಕ್ಷದಷ್ಟು ಜನಸಂಖ್ಯೆ ಇರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೂಡಲಸಂಗಮದಿಂದ 400 ಕಿ.ಮೀ ಪಾದಯಾತ್ರೆ ನಡೆಸಲಾಗುತ್ತಿದೆ.
ಆರ್ಥಿಕ ಹಾಗೂ ಶೈಕ್ಷಣಿಕ ಮೀಸಲಾತಿಯನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಈಗಾಗಲೇ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರೂ, ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿಗೆ ಸೇರ್ಪಡೆ ಮಾಡುವ ಕೆಲಸವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅದೇ ರೀತಿ ಕುರುಬ ಸಮುದಾಯದವರು ಎಸ್ಟಿಗೆ ಸೇರಿಸಬೇಕೆಂದು ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಈಶ್ವರಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಕಾಗಿನೆಲೆಯಿಂದಲೂ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುತ್ತಿದೆ. ಗಂಗಾಮತಸ್ಥರಿಗೆ ಎಸ್ಟಿ ಪ್ರಮಾಣ ಪತ್ರ ಕೊಡುತ್ತಿಲ್ಲ.
ಈ ಸಮುದಾಯಕ್ಕೆ ಯಾವಾಗ ಮೀಸಲಾತಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂಬುದನ್ನು ಖಚಿತವಾಗಿ ಹೇಳಬೇಕು, ನಿರ್ಧಿಷ್ಟ ಗಡುವಿನೊಳಗೆ ಮೀಸಲಾತಿ ಸೇರ್ಪಡೆ ಆಗಬೇಕು ಎಂದು ಪಟ್ಟು ಹಿಡಿದರು.
ಇದಕ್ಕೆ ಧ್ವನಿಗೂಡಿಸಿದ ಜೆಡಿಎಸ್ನ ಬಂಡೆಪ್ಪ ಕಾಶಂಪೂರ, ಫೆ.7ರಂದು ಬೃಹತ್ ಸಮಾವೇಶ ನಡೆಯುತ್ತಿದ್ದು, ಅಷ್ಟರೊಳಗೆ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಘೋಷಿಸಬೇಕೆಂದು ಆಗ್ರಹಿಸಿದರು.
ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸದಸ್ಯರು ಪ್ರಸ್ತಾಪಿಸಿರುವ ವಿಚಾರವನ್ನು ಸರ್ಕಾರ ಪರಿಶೀಲನೆ ಮಾಡಲಿದೆ. ಶೂನ್ಯವೇಳೆಯಲ್ಲಿ ಹೆಚ್ಚಿನ ಚರ್ಚೆಗೆ ಅವಕಾಶವಿಲ್ಲ ಎಂದರು.
ಗ್ರಾಮೀಣಾಭಿವೃದ್ದಿ ಸಚಿವ ಕೆ ಎಸ್ ಈಶ್ವರಪ್ಪ ಮಾತನಾಡಿ, ಸದಸ್ಯರು ಪ್ರಸ್ತಾಪಿಸಿರುವ ವಿಷಯ ಗಂಭೀರವಾಗಿದೆ. ಅರ್ಧಗಂಟೆ ಚರ್ಚೆಗೆ ಅವಕಾಶ ಮಾಡಿಕೊಡಿ ಎಂದು ಸ್ಪೀಕರ್ ಅವರಲ್ಲಿ ಮನವಿ ಮಾಡಿದರು.
ಈ ವೇಳೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮಾತನಾಡಿ, ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶ್ರೀ ಈಶ್ವರಾನಂದ ಪುರಿ ಸ್ವಾಮಿ ಜ.14ರಿಂದ ಪಾದಯಾತ್ರೆ ಪ್ರಾರಂಭ ಮಾಡಿದ್ದಾರೆ.
ಮೀಸಲಾತಿ ಸೇರ್ಪಡೆ ಮಾಡಬೇಕೆಂಬುದು ಮುಖ್ಯಮಂತ್ರಿಗಳ ಗಮನದಲ್ಲಿದೆ. ಆದಷ್ಟು ಶೀಘ್ರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಅದಕ್ಕೆ ಒಪ್ಪದಿದ್ದಾಗ ಕಾನೂನಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಆದರೆ, ಇದಕ್ಕೆ ತೃಪ್ತರಾಗದ ಬಸನಗೌಡ ಪಾಟೀಲ್ ಯತ್ನಾಳ್, ಬಂಡೆಪ್ಪ ಕಾಶಂಪೂರ, ತುಕಾರಾಂ, ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಮೊದಲಾದ ಸದಸ್ಯರು ಧರಣಿ ನಡೆಸಲು ಪ್ರಾರಂಭಿಸಿದರು.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಶೂನ್ಯವೇಳೆಯಲ್ಲಿ ವಿಷಯ ಚರ್ಚೆಗೆ ಅವಕಾಶವಿಲ್ಲ. ವಿಷಯ ಗಂಭೀರವಾಗಿರುವುದರಿಂದ ಪ್ರತ್ಯೇಕ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು. ನಿಯಮಾವಳಿ ಪ್ರಕಾರ ಲಿಖಿತವಾಗಿ ಬರೆದುಕೊಡಿ ಎಂದು ಸಮಾಧಾನಪಡಿಸಿದಾಗ ಧರಣಿ ವಾಪಸ್ ಪಡೆದರು.