ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕನ್ನಡಿಗರಿಗೆ ಶೇಕಡಾ 25 ರಷ್ಟು ಸೀಟುಗಳನ್ನು ಮೀಸಲಿರಿಸಿ ಆದೇಶ ಹೊರಡಿಸಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಸರ್ಕಾರ ರಾಷ್ಟ್ರೀಯ ಕಾನೂನು ವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತಂದು ಕನ್ನಡಿಗರಿಗೆ ಮೀಸಲು ನೀಡಿರುವ ಕ್ರಮ ಪ್ರಶ್ನಿಸಿ 17 ವರ್ಷದ ವಿದ್ಯಾರ್ಥಿ ಬಾಲಚಂದ್ರ ಕೃಷ್ಣನ್ ಎಂಬಾತ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ರಾಜ್ಯ ಸರ್ಕಾರ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ.
ಅರ್ಜಿದಾರರು, ರಾಷ್ಟ್ರೀಯ ಕಾನೂನು ವಿವಿ ಕಾಯ್ದೆಗೆ ತಿದ್ದುಪಡಿ ತಂದಿರುವ ಸರ್ಕಾರದ ಕ್ರಮ ಕಾನೂನು ಬಾಹಿರ. ರಾಜ್ಯ ಸರ್ಕಾರದ ಅನುದಾನ ಪಡೆಯದ ಶಿಕ್ಷಣ ಸಂಸ್ಥೆಗಳಿಗೆ ಮೀಸಲು ನಿಗದಿ ಮಾಡಲು ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಆರೋಪಿಸಿದ್ದು, ಸರ್ಕಾರದ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿದ್ದಾರೆ.
ರಾಜ್ಯ ಸರ್ಕಾರ ಕಳೆದ ಮಾರ್ಚ್ ತಿಂಗಳಲ್ಲಿ ಕಾಯ್ದೆಗೆ ತಿದ್ದುಪಡಿ ತಂದು, ರಾಷ್ಟ್ರೀಯ ಕಾನೂನು ಶಾಲೆಯ ಒಟ್ಟು ಸೀಟುಗಳಲ್ಲಿ ಶೇ. 25ರಷ್ಟನ್ನು ಕನ್ನಡಿಗರಿಗೆ ಲಭ್ಯವಾಗುವಂತೆ ಮೀಸಲು ನಿಗದಿಪಡಿಸಿತ್ತು. ಆ ಪ್ರಕಾರ ರಾಜ್ಯದಲ್ಲಿ 10 ವರ್ಷ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ.