ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಕೊರೊನಾ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಅಹ್ಮದ್ ಪಟೇಲ್ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ನಿಧನದಿಂದ ತೀವ್ರ ದುಃಖವಾಯಿತು. ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ, ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಓಂ ಶಾಂತಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
![cm yadiyurappa tweet](https://etvbharatimages.akamaized.net/etvbharat/prod-images/9655885_cmmmmm.jpg)
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ತಮ್ಮ ಸಂತಾಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ನನಗೆ ಆತ್ಮೀಯರಾಗಿದ್ದ ಅಹ್ಮದ್ ಪಟೇಲ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ದೀರ್ಘಕಾಲ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಪಟೇಲ್ ಪಕ್ಷಕ್ಕೆ ಆಧಾರ ಸ್ತಂಭವಾಗಿದ್ದರು. ಇವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದಿದ್ದಾರೆ.
![siddaramaiah tweet](https://etvbharatimages.akamaized.net/etvbharat/prod-images/9655885_cccm.png)
ಅಹ್ಮದ್ ಪಟೇಲ್ ಅವರ ನಿಧನಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ. ಅಹ್ಮದ್ ಪಟೇಲ್ ಅವರ ಸಾವು ಆಘಾತ ತಂದಿದೆ. ಅವರ ನಿಧನದಿಂದ ದೇಶಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬ ವರ್ಗಕ್ಕೆ ಭಗವಂತ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
![hd devegowda tweet](https://etvbharatimages.akamaized.net/etvbharat/prod-images/9655885_cmmmmbsy.jpg)
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸಹ ಸಂತಾಪ ಸೂಚಿಸಿದ್ದಾರೆ. ಪಟೇಲ್ ಅಗಲಿಕೆಯ ದುಃಖದ ಈ ಸಮಯದಲ್ಲಿ ಅವರ ಕುಟುಂಬದ ಸದಸ್ಯರು ಮತ್ತು ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ಸಿಗಲಿ, ಮೃತರ ಆತ್ಮಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಟ್ವೀಟ್ ಮಾಡಿದ್ದು, ಎಐಸಿಸಿ ಖಜಾಂಚಿ ಮತ್ತು ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕ ಅಹ್ಮದ್ ಪಟೇಲ್ ನಿಧನದ ಸುದ್ದಿ ಕೇಳಿ ತೀವ್ರ ದುಃಖ ಮತ್ತು ಆಘಾತ ಆಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮತ್ತು ರಾಷ್ಟ್ರಕ್ಕೆ ಅವರ ಅಚಲ ನಿಷ್ಠೆ ಮತ್ತು ಕೊಡುಗೆ ಆದರ್ಶಪ್ರಾಯವಾಗಿದೆ ಮತ್ತು ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದರು. ಅವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದು, ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು ಅವರು ಎಂದು ಸ್ಮರಿಸಿದರು. ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದರು. ಪಕ್ಷಕ್ಕೆ ಆಧಾರ ಸ್ತಂಭದಂತಿದ್ದ ಹಿರಿಯ ನಾಯಕನ ಅಗಲಿಕೆ ಪಕ್ಷಕ್ಕೆ ಭರಿಸಲಾರದ ನಷ್ಟವಾಗಿದೆ ಎಂದು ದುಃಖಿಸಿದ್ದಾರೆ.
ಅಹ್ಮದ್ ಪಟೇಲ್ ಅವರ ಜೊತೆ ಮೊದಲಿಂದಲೂ ಉತ್ತಮ ಒಡನಾಟ ಹೊಂದಿದ್ದೆ. ಅವರು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಮಾರ್ಗದರ್ಶಕರಾಗಿದ್ದರು. ಅವರ ಆಲೋಚನೆ, ವಿಚಾರ, ಸಿದ್ಧಾಂತಗಳು ನಮ್ಮೆಲ್ಲರಿಗೂ ಮಾದರಿಯಾಗಿತ್ತು. ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಅಹ್ಮದ್ ಪಟೇಲ್ ನಿಧನ: ಪ್ರಧಾನಿ ಮೋದಿ, ಸೋನಿಯಾ ಸೇರಿ ರಾಜಕೀಯ ನಾಯಕರಿಂದ ಸಂತಾಪ
ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ತಮ್ಮ ಟ್ವೀಟ್ನಲ್ಲಿ, ರಾಷ್ಟ್ರೀಯ ಕಾಂಗ್ರೆಸ್ಗೆ ಇಂದು ದುಃಖದ ದಿನ. ನಮ್ಮ ಅತ್ಯಂತ ಶ್ರಮಶೀಲ ನಾಯಕರಲ್ಲಿ ಒಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಅಹ್ಮದ್ ಪಟೇಲ್ ಜಿ ಅವರ ನಿಧನದೊಂದಿಗೆ ನಾವು ಪಕ್ಷದ ಪ್ರಬಲ ಸ್ತಂಭಗಳಲ್ಲಿ ಒಂದನ್ನು ಕಳೆದುಕೊಂಡಿದ್ದೇವೆ. ಅವರ ಕೊಡುಗೆ ಮತ್ತು ತ್ಯಾಗಗಳು ಅಪಾರವಾಗಿವೆ. ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು ಎಂದಿದ್ದಾರೆ.
ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಅಹ್ಮದ್ ಪಟೇಲ್ ಅವರ ನಿಧನದ ವಿಷಯ ಕೇಳಿದಾಗ ಬಹಳ ದುಃಖವಾಯಿತು. ಪಕ್ಷದ ನಿಷ್ಠೆಯಿಂದ ಸೇವೆ ಸಲ್ಲಿಸಿದ ಕಾಂಗ್ರೆಸ್ಸಿಗರು ಅವರು. ಅವರ ನಿಧನವು ರಾಷ್ಟ್ರೀಯ ಕಾಂಗ್ರೆಸ್ ಪಾಲಿಗೆ ಭರಿಸಲಾಗದ ನಷ್ಟವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು ಎಂದಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶ
ಇನ್ನೂ ಮಾಜಿ ಸಚಿವ ಹೆಚ್ ಕೆ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಹಾಗು ಸಲೀಂ ಅಹ್ಮದ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್ಆರ್ ಪಾಟೀಲ್ ಸೇರಿದಂತೆ ಹಲವು ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.