ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಏರಿಕೆಯಾದ ಕಾರಣಕ್ಕೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಶಾಲಾ ಮಕ್ಕಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಅನುಮತಿ ನೀಡುವಂತೆ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳು ಸರ್ಕಾರಕ್ಕೆ ಒತ್ತಾಯಿಸಿವೆ.
ಕಳೆದ ಮೂರು ತಿಂಗಳಿಂದ ರಾಜ್ಯದಲ್ಲಿ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಸಹ ಈ ವ್ಯವಸ್ಥೆಗೆ ಹೊಂದಿಕೊಂಡಿದ್ದಾರೆ. ಪರೀಕ್ಷೆ ಬರೆಯುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ಆದರೆ ಕೋವಿಡ್ -19ರ ಹಿನ್ನೆಲೆ ಏಪ್ರಿಲ್ 2 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ 6 ರಿಂದ 9ನೇ ತರಗತಿಗಳನ್ನು ಭೌತಿಕವಾಗಿ ಬಂದ್ ಮಾಡಲು ಆದೇಶಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳು ನಿರಂತರತೆ ತಪ್ಪಿ ಮಕ್ಕಳಿಗೆ ಮಾನಸಿಕ ಗೊಂದಲ ಉಂಟಾಗುತ್ತದೆ ಎಂದು ಖಾಸಗಿ ಶಾಲೆಗಳ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.
ಕೋವಿಡ್-19 ಪ್ರಭಾವ ಗ್ರಾಮೀಣ ಕರ್ನಾಟಕದಲ್ಲಿ ತುಂಬಾ ಕಡಿಮೆ ಇದೆ. ಆದ್ದರಿಂದ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ವೈಜ್ಞಾನಿಕವಾಗಿ ಕ್ರಮಕೈಗೊಳ್ಳಬೇಕು ಎಂದು ಖಾಸಗಿ ಶಾಲೆಗಳು ಒತ್ತಾಯಿಸಿವೆ.
ಖಾಸಗಿ ಶಾಲೆಗಳ ಬೇಡಿಕೆಗಳು:
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 2020-21 ರ ಸಾಲಿನ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಬೇಕು.
1 ರಿಂದ 9ನೇ ತರಗತಿಯವರೆಗೆ RTE ನಿಯಮದಂತೆ ಕಡ್ಡಾಯವಾಗಿ ಪರೀಕ್ಷೆ ನಡೆಸಿ ಮೌಲ್ಯಮಾಪನಕ್ಕೆ ಒಳಪಡಿಸಿ ಫಲಿತಾಂಶ ಪ್ರಕಟಿಸಲು ಆದೇಶಿಸಬೇಕು.
ಬೆಂಗಳೂರನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಏಪ್ರಿಲ್ ತಿಂಗಳಿನಿಂದ 6 ರಿಂದ 12 ತರಗತಿಯವರೆಗೆ ಭೌತಿಕ ತರಗತಿಗಳನ್ನು ನಡೆಸಲು ಅನುಮತಿ ನೀಡಬೇಕು.
ಕೋವಿಡ್ ಹಿನ್ನೆಲೆ ಸರ್ಕಾರ ಶೈಕ್ಷಣಿಕ ವಿಚಾರವಾಗಿ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳನ್ನು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಭವಿಷ್ಯತ್ತಿನಲ್ಲಿ ಆಗುವ ಪರಿಣಾಮವನ್ನು ಪರಿಗಣನೆಗೆ ತೆಗೆದುಕೊಂಡು ಅದೇಶಗಳನ್ನು ನೀಡಬೇಕು.
ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಕಾಯಂ ಆಗಿ ನೇಮಿಸಬೇಕು ಎಂದು ಖಾಸಗಿ ಶಾಲೆಗಳು ಒತ್ತಾಯಿಸಿವೆ.