ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ ಸಮಾನ ಮನಸ್ಕ ಸಂಘಟನೆಗಳಿಂದ ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟನಾ ಸಭೆಯನ್ನು ನಗರದ ಕುಮಾರಕೃಪ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಭಾನುವಾರ ಸಂಜೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಗತಿಪರ ನಾಯಕರು ಯತ್ನಾಳ್ ಹೇಳಿಕೆಯನ್ನು ಖಂಡಿಸಿದರಲ್ಲದೇ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ಉಚ್ಛಾಟಿಸುವಂತೆ ಬಿಜೆಪಿ ಮೇಲೆ ಒತ್ತಡ ತರಲು ನಿರ್ಧರಿಸಿದರು. ಸಭೆಯಲ್ಲಿ ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಇವರಲ್ಲದೇ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಆರ್. ಸುದರ್ಶನ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ವೇದಿಕೆಯ ಮೇಲೆ ಆಗಮಿಸಿ ಮಾತನಾಡುವಂತೆ ಸಿದ್ದರಾಮಯ್ಯರನ್ನು ಆಹ್ವಾನಿಸಿದಾಗ, ವೇದಿಕೆ ಏರಲು ನಿರಾಕರಿಸಿದ ಅವರು ನಾಳೆ ವಿಧಾನಸಭೆಯಲ್ಲಿ ವಿಚಾರವನ್ನು ಪ್ರಸ್ತಾಪಿಸಿ ಹೋರಾಟ ನಡೆಸುವುದಾಗಿ ತಿಳಿಸಿದರು. ಆ ಕಾರಣಕ್ಕಾಗಿಯೇ ಇಂದಿನ ಸಭೆಯಲ್ಲಿ ಮಾತನಾಡುವುದಿಲ್ಲ ಎಂದರು.