ಬೆಂಗಳೂರು : ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನಾ ಮೆರವಣಿಗೆ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗೆ ಒತ್ತಾಯಿಸಿ ದೇಶದ ಅನ್ನದಾತರು ಚಳಿ, ಗಾಳಿ ಎನ್ನದೇ, ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಹೋರಾಟ ನಡೆಸುತ್ತಿದ್ದಾರೆ. 50 ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ. ರೈತರ ಈ ಹೋರಾಟವನ್ನು ಬೆಂಬಲಿಸಿ, ಅವರಿಗೆ ಶಕ್ತಿ ತುಂಬಲು ಕರ್ನಾಟಕ ಕಾಂಗ್ರೆಸ್ ಜನವರಿ 20ರಂದು 'ರಾಜಭವನ ಚಲೋ' ಹಮ್ಮಿಕೊಂಡಿದೆ ಎಂದಿದ್ದಾರೆ.
ಈ ಮೂಲಕ ಕೇಂದ್ರ ಸರ್ಕಾರದ ರೈತ ವಿರೋಧಿ ಕರಾಳ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು. ಪಕ್ಷದ ನಾಯಕರು, ಕಾರ್ಯಕರ್ತರು, ರೈತರು, ರೈತ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಓದಿ : ಗಡಿ ವಿಚಾರ ಎತ್ತುವುದು ಸರಿಯಲ್ಲ, ಮಹಾಜನ್ ವರದಿಯೇ ಅಂತಿಮ: ಡಿ.ಕೆ.ಶಿವಕುಮಾರ್