ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ತಮ್ಮ ಎರಡನೇ ಹಂತದ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. ಒಂದು ವಾರದ ಅವಧಿಯಲ್ಲಿ ಎರಡನೇ ಪ್ರವಾಸ ಇದಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆ ಜುಲೈ 29ರಿಂದ 31ರವರೆಗೆ ರಾಜ್ಯದ ಧಾರವಾಡ ಮತ್ತು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು, ಸಂಸದರು, ಸಂಸತ್ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ವಿಧಾನಪರಿಷತ್ ಸದಸ್ಯರು ಹಾಗೂ ಜಿಲ್ಲಾ ಮುಖಂಡರ ಜೊತೆ ಪಕ್ಷ ಸಂಘಟನೆ ಸಂಬಂಧ ಸುರ್ಜೇವಾಲ ಸಮಾಲೋಚನೆ ನಡೆಸಲಿದ್ದಾರೆ.

ಗುರುವಾರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿಗೆ ಆಗಮಿಸುವ ಸುರ್ಜೇವಾಲ ಅವರು, ಡಿಕೆಶಿ ಜೊತೆ ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ. ಹುಬ್ಬಳ್ಳಿಯಲ್ಲಿ ಸಂಜೆ 6 ರಿಂದ 8 ಗಂಟೆಯವರೆಗೆ ಹಾವೇರಿ ಹಾಗೂ ವಿಜಯಪುರ ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, 2019ರ ಲೋಕಸಭಾ ಅಭ್ಯರ್ಥಿಗಳು, ಶಾಸಕರು ಮತ್ತು 2018ರ ವಿಧಾನಸಭಾ ಅಭ್ಯರ್ಥಿಗಳು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಸಂಸದರು ಹಾಗೂ 2 ಜಿಲ್ಲೆಯ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.
ಓದಿ : ‘ಮುಂದಿನ ಸಿಎಂ ಸಿದ್ದರಾಮಯ್ಯ’.. ಬೆಳಗಾವಿಯಲ್ಲೂ ವಿಪಕ್ಷ ನಾಯಕನ ಪರ ಘೋಷಣೆ
ಅಂದು ರಾತ್ರಿ ಹುಬ್ಬಳ್ಳಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಅವರು, ಶುಕ್ರವಾರ ಬೆಳಗ್ಗೆ 9.30 ರಿಂದ ಸಂಜೆ 7 ಗಂಟೆಯವರೆಗೆ ಸುದೀರ್ಘ ಚರ್ಚೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಧಾರವಾಡ, ಬಾಗಲಕೋಟೆ, ಹಾವೇರಿ, ವಿಜಯಪುರ, ಬೆಳಗಾವಿ, ಚಿಕ್ಕೋಡಿ, ಉತ್ತರಕನ್ನಡ ಮತ್ತು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, 2019ರ ಲೋಕಸಭಾ ಅಭ್ಯರ್ಥಿಗಳು, 2018ರ ಅಭ್ಯರ್ಥಿಗಳು, ಶಾಸಕರು ಮತ್ತು ವಿಧಾನಸಭಾ, ವಿಧಾನಪರಿಷತ್ ಸದಸ್ಯರುಗಳು ಮತ್ತು ಅಭ್ಯರ್ಥಿಗಳು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು, ಮಾಜಿ ವಿಧಾನಪರಿಷತ್ ಸದಸ್ಯರುಗಳು, ರಾಜ್ಯ ಮತ್ತು ಜಿಲ್ಲಾ ಮುಂಚೂಣಿ ಘಟಕ ಮತ್ತು ಸೆಲ್ಗಳ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ.
ಅಂದು ರಾತ್ರಿ ರೈಲಿನ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸುವ ಸುರ್ಜೇವಾಲ ಮತ್ತು ಡಿಕೆಶಿ, ಶನಿವಾರ ಬೆಳಗ್ಗೆ 7.20ಕ್ಕೆ ಮೈಸೂರು ತಲುಪಲಿದ್ದಾರೆ. ಮೈಸೂರಿನಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ಜಿಲ್ಲಾ ನಾಯಕರ ಜೊತೆ ಚರ್ಚಿಸಲಿದ್ದಾರೆ. ಈ ಸಭೆಯ ಮುಕ್ತಾಯದ ಬಳಿಕ ಮೈಸೂರಿನಿಂದ ಹೊರಟು ಬೆಂಗಳೂರಿಗೆ ರಾತ್ರಿ ತಲುಪಲಿದ್ದಾರೆ.
ಮುಂಬರುವ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ನಿರಂತರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ಆರಂಭಿಕ ಸಭೆಗಳನ್ನು ನಡೆಸಲು ಸುರ್ಜೇವಾಲಾ ಆಗಮಿಸುತ್ತಿದ್ದಾರೆ. ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯ ಕಾಂಗ್ರೆಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ.