ಬೆಂಗಳೂರು : ರಾಜ್ಯಪಾಲ ವಜುಭಾಯಿ ವಾಲಾ ಅವರು ಮಣಿಪಾಲ್ ಗ್ಲೋಬಲ್ ಎಜುಕೇಷನ್ ಸಂಸ್ಥೆಯ ಅಧ್ಯಕ್ಷ ಟಿ ವಿ ಮೋಹನ್ದಾಸ್ ಪೈ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ರಾಜಭವನದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ವಜುಭಾಯಿ ವಾಲಾ ಅವರು, ಪೈ ಅವರಿಗೆ ಪದವಿ ಪ್ರದಾನ ಮಾಡಿ ಮಾತನಾಡಿ, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ನಿಟ್ಟಿನಲ್ಲಿ ಪೈ ಅವರ ಸೇವೆ ಅನುಕರಣೀಯವಾಗಿದೆ ಎಂದರು.
ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ್ ನಾರಾಯಣ ಅವರು ಮಾತನಾಡಿ, ಮೋಹನ್ದಾಸ್ ಪೈ ಅವರು ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಇವರು ಇನ್ಫೋಸಿಸ್ನಂತಹ ಪ್ರತಿಷ್ಠಿತ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿಯಾಗಿ ಆ ಕಂಪನಿಗೆ ಆರ್ಥಿಕ ಸದೃಢತೆ ತಂದುಕೊಟ್ಟವರು. ಅಂತಹವರಿಗೆ ಗೌರವ ಡಾಕ್ಟರೇಟ್ ಪದವಿ ಸಲ್ಲುತ್ತಿರುವುದು ಸಂತೋಷ ಉಂಟು ಮಾಡಿದೆ ಎಂದರು.
ಸಂಶೋಧನೆಗೆ ಹೆಚ್ಚು ಒತ್ತು ಬೇಕೆಂದ ಪೈ : ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಮೋಹನ್ದಾಸ್ ಪೈ ಅವರು, ಶೈಕ್ಷಣಿಕವಾಗಿ ರಾಜ್ಯವು ಉನ್ನತ ಮಟ್ಟದಲ್ಲೇ ಇದ್ದರೂ ಸಂಶೋಧನೆಗೆ ಇನ್ನಷ್ಟು ಒತ್ತು ನೀಡಲೇಬೇಕು. ಕೊನೆಪಕ್ಷ 100 ಕೋಟಿ ರೂ.ಗಳಷ್ಟು ಮೊತ್ತವನ್ನಾದರೂ ಸಂಶೋಧನಾ ಕ್ಷೇತ್ರಕ್ಕೆ ಮೀಸಲಿಡಬೇಕು.
ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಆರ್ಥಿಕ ಸಹಕಾರವನ್ನು ಒದಗಿಸಬೇಕು. ಆಗ ಮಾತ್ರ ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ಬರುತ್ತದೆ ಹಾಗೂ ದೇಶದ ಅಭಿವೃದ್ಧಿಗೆ ವೇಗ ಬರುತ್ತದೆ ಎಂದರು. ಶಾಲೆ-ಕಾಲೇಜುಗಳಲ್ಲಿ ಕಲಿಯುವ ಮಕ್ಕಳಿಗೆ ಎಲ್ಲಾ ಸೌಲಭ್ಯಗಳನ್ನು ಉದಾರವಾಗಿ ಒದಗಿಸಬೇಕು. ಮೂಲಸೌಕರ್ಯಗಳನ್ನು ಪರಿಣಾಮಕಾರಿ ಒದಗಿಸಬೇಕು ಎಂದು ಪೈ ಮನವಿ ಮಾಡಿದರು.
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರ ಗೌಡ, ಕುಲಸಚಿವ ಪ್ರೊ. ಬಸವರಾಜ್ ಪದ್ಮಶಾಲಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.