ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ದುಷ್ಕರ್ಮಿಗಳಿಗೆ ಕಾಂಗ್ರೆಸ್ ಬೆಂಬಲ ಇದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ, ಎಸ್ಡಿಪಿಐನಂತಹ ಸಂಘಟನೆಗಳನ್ನು ನಿಷೇಧಿಸಬೇಕು. ಈಗಾಗಲೇ ಇಂತಹ ಸಂಘಟನೆಗಳ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡಲಾಗಿದೆ. ನಿನ್ನೆ ನಡೆದ ಘಟನೆ ಬಗ್ಗೆಯೂ ಕೇಂದ್ರಕ್ಕೆ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಘಟನೆ ಹಿಂದೆ ಕಾಂಗ್ರೆಸ್ ಮುಖಂಡರ ಕೈವಾಡವಿದ್ದು, ಇವರೇ ಇಂತಹ ಕೃತ್ಯಗಳಿಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಪಿಎಫ್ಐ, ಎಸ್ಡಿಪಿಐ ಸಂಘಟನೆಗಳಿಗೂ ಇವರದ್ದೇ ಕುಮ್ಮಕ್ಕಿದೆ ಎಂದು ಆರೋಪಿಸಿದರು.
ಶಾಸಕ ಜಮೀರ್ ಅಹಮ್ಮದ್ ಅವರ ವರ್ತನೆ ಸರಿಯಿಲ್ಲ. ಅವರು ಹೇಳುವುದು ಒಂದು, ಮಾಡುವುದು ಮತ್ತೊಂದು. ಪಾದರಾಯನಪುರ ಪುಂಡರನ್ನು ಸಹ ಜಾಮೀನು ಕೊಡಿಸಿ ಬಿಡಿಸಿದವರೇ ಇವರು ಎಂದು ಟೀಕಿಸಿದರು.