ಬೆಂಗಳೂರು: ಶಿಫಾ ಆಸ್ಪತ್ರೆಯಲ್ಲಿ ನೂರು ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು, ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಉದ್ಘಾಟಿಸಿದರು.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಲೀಂ ಅಹ್ಮದ್, ಆರೋಗ್ಯ ಸಚಿವ ಶ್ರೀರಾಮುಲು 'ದೇವರೇ ನಮ್ಮನ್ನು ಕಾಪಾಡಬೇಕು' ಎಂಬ ಹೇಳಿಕೆ ನೀಡಿದ್ದಾರೆ. ಇದು ಸರ್ಕಾರದ ಅಸಮರ್ಥತೆ ಮತ್ತು ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದ್ದು, ಸೋಂಕಿತರಿಗೆ ಚಿಕಿತ್ಸೆ, ಹೆಚ್ಚು ಪರೀಕ್ಷೆ ಮಾಡುವುದರಲ್ಲೂ ವಿಫಲವಾಗಿದೆ ಎಂದು ಆರೋಪಿಸಿದರು.
ಶ್ರೀರಾಮುಲು ಅವರ ಹೇಳಿಕೆ ಸರ್ಕಾರದ ಬೇಜವಾಬ್ದಾರಿತನ ತೋರಿಸುತ್ತದೆ. ಆರೋಗ್ಯ ಸಚಿವರು ತಮ್ಮ ಸಚಿವ ಸ್ಥಾನದಲ್ಲಿ ಮುಂದುವರೆಯಲು ಯಾವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ. ಈ ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.