ಬೆಂಗಳೂರು: ಸಿಡಿ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಹೊಸ ಬಾಂಬ್ ಸಿಡಿಸುವುದಾಗಿ ಸ್ಫೋಟಕ ಹೇಳಿಕೆ ನೀಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮಗೋಷ್ಟಿ ನಡೆಸಲಿದ್ದಾರೆ. ಈ ಹಿನ್ನೆಲೆ ಸದಾಶಿವನಗರ ಪೊಲೀಸ್ ಠಾಣೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.
ಯಾರ ವಿರುದ್ಧ ಆರೋಪ ಮಾಡುತ್ತಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಮುಂಜಾಗ್ರತ ಕ್ರಮವಾಗಿ ಸದಾಶಿವನಗರ ಪೊಲೀಸ್ ಠಾಣೆ ಮುಂದೆ ಬ್ಯಾರಿಕೇಡ್ ಹಾಕಲಾಗಿದೆ.
ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರು ಕೇಳಿ ಬರುತ್ತಿದೆ. ನಿನ್ನೆ ಅಜ್ಞಾತ ಸ್ಥಳದಿಂದ ಹರಿಬಿಟ್ಟಿದ್ದ ವಿಡಿಯೋದಲ್ಲಿ ಯುವತಿ ಡಿಕೆಶಿ ಹೆಸರು ಪ್ರಸ್ತಾಪಿಸಿದ್ದಳು. ಈ ಮಧ್ಯೆ ಇಂದು ಹೊಸ ಬಾಂಬ್ ಸಿಡಿಸುವುದಾಗಿ ಹೇಳಿಕೆ ಕೊಟ್ಟಿದ್ದ ರಮೇಶ್ ಜಾರಕಿಹೊಳಿ ಮಾಧ್ಯಮಗೋಷ್ಟಿಯಲ್ಲಿ ಹೆಸರು ಪ್ರಸ್ತಾಪಿಸುವ ಸಾಧ್ಯತೆಯಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಡಿ.ಕೆ.ಶಿವಕುಮಾರ್ ನಿವಾಸಕ್ಕೂ ಪೊಲೀಸ್ ಭದ್ರತೆ: ಡಿ.ಕೆ. ಶಿವಕುಮಾರ್ ವಿರುದ್ಧ ಜಾರಕಿಹೊಳಿ ದೂರು ನೀಡಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆಯಿದೆ. ಪರ-ವಿರೋಧ ಪ್ರತಿಭಟನೆ ನಡೆಯಬಹುದು. ಈ ವೇಳೆ ಅಹಿತಕರ ಘಟನೆ ಸಂಭವಿಸದಂತೆ ತಡೆಯಲು ಡಿಕೆಶಿ ನಿವಾಸಕ್ಕೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.