ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ ಶೀಘ್ರವೇ ಕಾಂಗ್ರೆಸ್ ಸೇರ್ಪಡೆ ಆಗುವ ಸಾಧ್ಯತೆ ಇದೆ.
![Koliwad](https://etvbharatimages.akamaized.net/etvbharat/prod-images/9168364_bevuu.jpg)
ನಿನ್ನೆ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಕೆಲ ಮುಖಂಡರ ಜೊತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರ ಡಿ.ಕೆ. ಶಿವಕುಮಾರ್ ಅವರನ್ನು ಸಂಪರ್ಕಿಸಿ ಇದೇ ವಿಚಾರವಾಗಿ ಸಮಾಲೋಚಿಸಿದ್ದಾರೆ ಎಂಬ ಮಾಹಿತಿ ಇದೆ.
![Koliwad](https://etvbharatimages.akamaized.net/etvbharat/prod-images/9168364_siddii.jpg)
ಬಿಜೆಪಿಯಿಂದ ಉಚ್ಚಾಟನೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೋಮಣ್ಣ ಬೇವಿನಮರದ ಅವರಿಗೆ ಪಕ್ಷ ನಿರಾಶೆಗೊಳಿಸಿತ್ತು. ಗೃಹ ಸಚಿವರಾಗಿರುವ ಬಸವರಾಜ್ ಬೊಮ್ಮಾಯಿಗೆ ಟಿಕೆಟ್ ನೀಡಲು ಅಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದರು. ಟಿಕೆಟ್ ಸಿಗದೇ ಬೇಸರಗೊಂಡ ಬೇವಿನಮರದ ಇದರಿಂದಾಗಿ ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಸಾಕಷ್ಟು ಮನವೊಲಿಸುವ ಪ್ರಯತ್ನ ನಡೆದರೂ ನಾಮಪತ್ರ ವಾಪಸ್ ಪಡೆದಿರಲಿಲ್ಲ. ಕಣದಲ್ಲಿದ್ದು 7,203 ಮತ ಪಡೆದಿದ್ದರು. ಅಂತಿಮವಾಗಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದರು. ಸೋಮಣ್ಣ ಬೇವಿನಮರದ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ನಂತರ ರಾಜಕೀಯವಾಗಿ ತೆರೆಮರೆಗೆ ಸರಿದಿದ್ದ ಅವರು ಕಾಂಗ್ರೆಸ್ ಸೇರ್ಪಡೆಗೆ ಒಲವು ವ್ಯಕ್ತಪಡಿಸಿದ್ದು, ಈ ಕುರಿತು ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರೊಂದಿಗೆ ಚರ್ಚೆ ನಡೆಸಿ, ಕಾಂಗ್ರೆಸ್ ಪಕ್ಷದ ನಿಯಮದಂತೆ ಅರ್ಜಿ ಸಲ್ಲಿಸಿ ಸೇರ್ಪಡೆಗೆ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಕ್ಟೋಬರ್ 21 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ತೆರಳಲಿದ್ದು, ಅಂದು ಅಲ್ಲಿಯೇ ಸೋಮಣ್ಣ ಬೇವಿನಮರದ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ ದಟ್ಟವಾಗಿದೆ ಎಂದು ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭಿಸಿದೆ.