ಬೆಂಗಳೂರು: ಕೊರೊನಾ ರೂಪಾಂತರ ವೈರಾಣು ಹಬ್ಬುವಿಕೆ ಭೀತಿಯಿಂದ ಇಂದು ರಾತ್ರಿ 11 ಗಂಟೆಯಿಂದ ಜನವರಿ 2ರ ಮುಂಜಾನಯವರೆಗೆ ಜಾರಿಗೊಳಿಸಲು ಉದ್ದೇಶಿಸಿದ್ದ ನೈಟ್ ಕರ್ಫ್ಯೂ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.
ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ನೈಟ್ ಕರ್ಫ್ಯೂವನ್ನು ಜಾರಿಗೆ ತರಲು ಈ ಹಿಂದೆ ಸರ್ಕಾರ ತೀರ್ಮಾನಿಸಿತ್ತು.
ಓದಿ: ಕೊರೊನಾದಂತಹ ವ್ಯಾಧಿಯಿಂದ ಜನರ ರಕ್ಷಣೆಗೆ ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳ ಸ್ಥಾಪನೆ
ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ನೈಟ್ ಕರ್ಫ್ಯೂ ಅಗತ್ಯವಿಲ್ಲವೆಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಹೀಗಾಗಿ, ನಿರ್ಧಾರವನ್ನು ಮರುಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ನೈಟ್ ಕರ್ಫ್ಯೂ ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ವೈರಾಣು ಹರಡುವಿಕೆ ತಡೆಯುವಂತೆ ಸಿಎಂ ಮನವಿ ಮಾಡಿದ್ದಾರೆ.