ನವದೆಹಲಿ: ನೀರು ಬಿಡುಗಡೆಗೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ನೀಡಿದ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತು. ಇದೇ ಸಂದರ್ಭದಲ್ಲಿ ಹೆಚ್ಚುವರಿ ನೀರು ಬಿಡುಗಡೆ ಕೋರಿ ಸಲ್ಲಿಸಿದ್ದ ತಮಿಳುನಾಡಿನ ಅರ್ಜಿಯನ್ನೂ ವಜಾಗೊಳಿಸಿತು.
ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶವನ್ನು ಇತ್ತೀಚೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಎತ್ತಿ ಹಿಡಿದಿತ್ತು. ಈ ಆದೇಶ ಪ್ರಶ್ನಿಸಿ ಕರ್ನಾಟಕ ಬುಧವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ರಾಜ್ಯದಲ್ಲಿ ಬರಗಾಲವಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಉಂಟಾಗಿದೆ. ಒಳಹರಿವು ಇಲ್ಲದ ಕಾರಣ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಹೀಗಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪುನರ್ಪರಿಶೀಲಿಸಲು ನಿರ್ದೇಶಿಸಬೇಕು ಎಂದು ಸರ್ಕಾರ ಅರ್ಜಿಯಲ್ಲಿ ಕೋರಿತ್ತು.
ಗುರುವಾರ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಜಲವಿವಾದದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲಾಗಲ್ಲ. ಪ್ರತಿ 15 ದಿನಗಳಿಗೊಮ್ಮೆ ಪ್ರಾಧಿಕಾರ ಸಭೆ ನಡೆಸಲಿ ಎಂದು ಇದೇ ವೇಳೆ ಸಲಹೆ ನೀಡಿದೆ.
ನಿರ್ವಹಣಾ ಸಮಿತಿ ಹೇಳಿದ್ದೇನು?: ಈಚೆಗೆ ನಡೆದ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ, ತಮಿಳುನಾಡಿಗೆ ಸೆಪ್ಟೆಂಬರ್ 13 ರಿಂದ ಅನ್ವಯವಾಗುವಂತೆ ಮುಂದಿನ 15 ದಿನಗಳವರೆಗೆ ನಿತ್ಯ ಬಾಕಿ ಇರುವ 6,500 ಕ್ಯೂಸೆಕ್ ಸೇರಿದಂತೆ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ಕರ್ನಾಟಕ ಹರಿಸಬೇಕು. ನಿತ್ಯ ಬಿಟ್ಟ 5 ಸಾವಿರ ಕ್ಯೂಸೆಕ್ ನೀರು ಬಿಳಿಗುಂಡ್ಲು ಅಣೆಕಟ್ಟೆ ಸೇರಿದ್ದನ್ನು ಖಚಿತಪಡಿಸಬೇಕು ಎಂದು ಹೇಳಿದೆ. ಈ ಕುರಿತ ಮುಂದಿನ ಸಭೆಯನ್ನು ಸೆಪ್ಟೆಂಬರ್ 26 ಕ್ಕೆ ನಡೆಸಲಾಗುವುದು ಎಂದಿದೆ. ಇದನ್ನು ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮುಂದೆ ಪ್ರಶ್ನಿಸಿತ್ತು. ಆದರೆ, ಅಲ್ಲಿಯೂ ಹಿನ್ನಡೆಯಾಗಿ ಸಮಿತಿಯ ಆದೇಶವನ್ನು ಪ್ರಾಧಿಕಾರ ಎತ್ತಿ ಹಿಡಿದಿತ್ತು.
ಇದ್ದ ಕೊನೆಯ ಅವಕಾಶವೂ ಮಿಸ್!: ಕಾವೇರಿ ಸಮಿತಿ, ಪ್ರಾಧಿಕಾರ ಮತ್ತು ಈಗ ಸುಪ್ರೀಂ ಕೋರ್ಟ್ನಲ್ಲೂ ನೀರಿನ ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದೆ. ಇದ್ದ ಮೂರೂ ಅವಕಾಶಗಳು ಕೈತಪ್ಪಿದ್ದರಿಂದ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈಗಾಗಲೇ ಮಳೆ ಕೊರತೆಯಿಂದಾಗಿ ರಾಜ್ಯ ನಲುಗಿದ್ದರೆ, ಕೆಆರ್ಎಸ್ ಅಣೆಕಟ್ಟೆಯಲ್ಲಿ ನೀರಿನ ಕೊರತೆ ತೀವ್ರವಾಗಿದ್ದು, ನೀರು ಬಿಟ್ಟಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಬಂದೊದಗುವ ಸಾಧ್ಯತೆ ಗೋಚರಿಸಿದೆ.