ಬೆಂಗಳೂರು: ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಬಹುದಾದ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಈ ಕುರಿತು ಇಂದೇ ಅಗತ್ಯ ಸುತ್ತೋಲೆ ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಯುಕ್ತರಿಗೆ ಸೂಚಿಸಿ ಟಿಪ್ಪಣಿ ನೀಡಲಾಗಿದೆ. ಇಲಾಖೆಯ 1ರಿಂದ 10ನೇ ತರಗತಿಯ ಸಮಾಜ ವಿಜ್ಞಾನ, ಭಾಷಾ ವಿಷಯಗಳ ಯಾವುದೇ ಪಠ್ಯಗಳಲ್ಲಿ ಇರಬಹುದಾದ ಇಂತಹ ಯಾವುದೇ ಸಂಕೀರ್ಣ ವಿಷಯಗಳ ಕುರಿತು ಶಿಕ್ಷಕರು ಮತ್ತು ವಿಷಯ ತಜ್ಞರನ್ನೊಳಗೊಂಡ ಸಮಿತಿ ರಚಿಸಿ ಅವರಿಂದ ವರದಿ ಪಡೆದು 15 ದಿನಗಳಲ್ಲಿ ವರದಿ ಸಲ್ಲಿಸಬೇಕೆಂದೂ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ. ವರದಿ ಪಡೆದ ನಂತರ ವರದಿಯಲ್ಲಿ ಅಂತಹ ಪಠ್ಯಭಾಗಗಳಿದ್ದರೆ ಅದರ ಪರಾಮರ್ಶೆಗೆ ತಜ್ಞ ಸಮಿತಿ ನೇಮಕ ಮಾಡಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.
ಓದಿ: ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಅವಹೇಳನ ಆರೋಪ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ಏನು?
“ಸ್ವತಃ ಮಂತ್ರಾಲಯ ಶ್ರೀಕ್ಷೇತ್ರದ ಸ್ವಾಮೀಜಿಯವರು ನನಗೆ ದೂರವಾಣಿ ಕರೆ ಮಾಡಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಯಾವುದೇ ಪಠ್ಯಪುಸ್ತಕಗಳ ಪರಿಷ್ಕರಣೆಯಾಗಿಲ್ಲ ಇಲ್ಲವೇ ಹೊಸ ಪಾಠಭಾಗಗಳನ್ನು ಸೇರ್ಪಡೆ ಮಾಡಿಲ್ಲ. ಈ ಹಿಂದೆಯೇ ಆಗಿರುವ ಹಾಗೂ ಪ್ರಸ್ತುತ ಬೆಳಕಿಗೆ ಬಂದಿರುವ ಈ ಪ್ರಮಾದ ಸರಿಪಡಿಸಲು ಇಂದೇ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಮುಂದಿನ ದಿನಗಳಲ್ಲಿ ಸಮಗ್ರ ಪಠ್ಯ ಅವಲೋಕನಕ್ಕೆ ಕ್ರಮ ವಹಿಸಲಾಗುತ್ತದೆ” ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.