ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ರಾಜ್ಯದಲ್ಲಿ ಕೋರ್ಟ್ ಕಲಾಪಗಳು ನಡೆಯದಿರುವ ಪರಿಣಾಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರ ಗುಮಾಸ್ತರಿಗೆ ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಈ ಕುರಿತು ಕರ್ನಾಟಕ ರಾಜ್ಯ ವಕೀಲರುಗಳ ಗುಮಾಸ್ತರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಗುಮಾಸ್ತರ ಪರ ವಕೀಲರು ಪೀಠಕ್ಕೆ ವಿವರಿಸಿ, ಧಾರವಾಡ ಪೀಠದಲ್ಲಿ ಸುಮಾರು 80 ಮಂದಿ ವಕೀಲರ ಗುಮಾಸ್ತರಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಇವರಿಗೆ ತುರ್ತು ನೆರವಿನ ಅಗತ್ಯವಿದೆ. ರಾಜ್ಯ ವಕೀಲರ ಪರಿಷತ್ತು ಮತ್ತು ರಾಜ್ಯ ಸರ್ಕಾರಕ್ಕೆ ಈ ಸಂಬಂಧ ಮನವಿ ಸಲ್ಲಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಧಾರವಾಡ ಪೀಠದಲ್ಲಿ ಅನೇಕ ಹಿರಿಯ ವಕೀಲರಿದ್ದು, ಅವರಿಂದ ಸಂಗ್ರಹಿಸಿರುವ 25 ಸಾವಿರ ಮೊತ್ತ ತುಂಬಾ ಕಡಿಮೆ. ಇನ್ನೂ ಹೆಚ್ಚಿನ ಮೊತ್ತ ಸಂಗ್ರಹಿಸಲು ಮುಂದಾಗಬೇಕೆಂದು ಸೂಚಿಸಿತು.
ಹಾಗೆಯೇ, ವಕೀಲರ ಗುಮಾಸ್ತರಿಗೆ ಆರ್ಥಿಕ ನೆರವು ಕಲ್ಪಿಸಲು ಕೋರಿ ಧಾರವಾಡ ವಕೀಲರ ಸಂಘ ಸಲ್ಲಿಸಿರುವ ಮನವಿ ಮೇರೆಗೆ ಕೈಗೊಂಡಿರುವ ಕ್ರಮಗಳೇನು ಮತ್ತು ವಕೀಲರಿಗೆ 5 ಲಕ್ಷ ರೂಪಾಯಿ ಸಾಲ ಸೌಲಭ್ಯ ಕಲ್ಪಿಸುವಂತೆ ಕೋರಿ ಬೆಳಗಾವಿ ವಕೀಲರ ಸಂಘ ಹಾಗೂ ಬೆಂಗಳೂರು ವಕೀಲರ ಸಂಘ ಸಲ್ಲಿಸಿರುವ ಮನವಿ ಪತ್ರದ ಸಂಬಂಧ ಸರ್ಕಾರದ ನಿಲುವೇನು ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.