ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಮೇ 16 ರಿಂದ 2022-23ನೇ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದೆ. ಆದರೆ, ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಕೆಲವು ತಿಂಗಳುಗಳಿಂದ ತೀವ್ರವಾಗಿ ಮಳೆ ಆಗುತ್ತಿದೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕೆಳಕಂಡ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶೈಕ್ಷಣಿಕ ಉಸ್ತುವಾರಿ ಅಧಿಕಾರಿ, ಸಿಬ್ಬಂದಿಗಳಿಗೆ ವಿಶೇಷ ಸುತ್ತೋಲೆ ಹೊರಡಿಸುವ ಮೂಲಕ ಸೂಚಿಸಿದೆ.
ತೀವ್ರ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿರುವ ಕೆಲವು ಶಾಲಾ ಕಟ್ಟಡಗಳು ಯಾವುದೇ ಸಂದರ್ಭದಲ್ಲಿ ಹಾನಿಗೊಳಗಾಗುವ, ಬಿದ್ದು ಹೋಗುವ ಸಂಭವವಿರುತ್ತದೆ. ಪ್ರಯುಕ್ತ, ಅಂತಹ ಶಾಲಾ ಕಟ್ಟಡಗಳನ್ನು, ತರಗತಿಯ ಕೊಠಡಿ, ಶೌಚಾಲಯಗಳನ್ನು ಬಳಸದೇ ಸಮೀಪದ ಸುಸ್ಥಿತಿಯಲ್ಲಿರುವ ಕಟ್ಟಡ, ಕೊಠಡಿಗಳನ್ನು ಬಳಕೆ ಮಾಡಿಕೊಳ್ಳುವುದು.
ಮಕ್ಕಳು ಶಿಥಿಲಾವಸ್ಥೆಯಲ್ಲಿರುವ ಕಟ್ಟಡ, ಕೊಠಡಿಗಳ ಮತ್ತು ಶೌಚಾಲಯಗಳ ಸಮೀಪದಲ್ಲಿ ಸುತ್ತಾಡದಂತೆ ಎಚ್ಚರಿಕೆ ಕ್ರಮ ವಹಿಸುವುದು, ಶಿಥಿಲಾವಸ್ಥೆಯಲ್ಲಿರುವ ಇಂತಹ ಕಟ್ಟಡಗಳ ತೀವ್ರತೆಯನ್ನು ಪರಿಗಣಿಸಿ ತೆರವುಗೊಳಿಸಲು ಅಥವಾ ನೆಲಸಮಗೊಳಿಸಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
ಕೆಲವೆಡೆ ತೀವ್ರ ಮಳೆ: ಮಳೆಯಿಂದಾಗಿ ಮಕ್ಕಳಿಗೆ ಕೆಮ್ಮು, ನೆಗಡಿ, ಜ್ವರ ಹಾಗೂ ಇನ್ನಿತರ ಲಕ್ಷಣಗಳು ಕಂಡು ಬಂದಲ್ಲಿ ಕೋವಿಡ್-19ರ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸೂಚಿಸಿರುವ ಪ್ರಾಮಾಣಿತ ಕಾರ್ಯಾಚರಣಾ ವಿಧಾನ (Standard, Operating Procedure)ದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳತಕ್ಕದ್ದು.
ಕೆಲವೆಡೆ ತೀವ್ರ ಮಳೆಯಿಂದಾಗಿ ಪ್ರವಾಹ ಅಥವಾ ನೆರೆ ಬಂದು ವಿದ್ಯಾರ್ಥಿಗಳು ಶಾಲೆಗಳಿಗೆ ಬಂದು ಹೋಗಲು ತೊಂದರೆಯುಂಟಾಗುವ ಅಥವಾ ಕೆಲವು ಸಂದರ್ಭಗಳಲ್ಲಿ ಮಳೆಯಿಂದಾಗಿ ಶಾಲೆಗಳ ಕೊಠಡಿಗಳಲ್ಲಿ, ಆವರಣದೊಳಗೆ ನೀರು ಸಂಗ್ರಹವಾಗುವ ಸಂಭವವಿರುತ್ತದೆ.
ಪೂರ್ವಾನುಮತಿ ಪಡೆದು ಶಾಲೆಗಳಿಗೆ ರಜೆ: ಇಂತಹ ಸಂದರ್ಭಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳ (ಸ್ಥಳೀಯ ಸಂಸ್ಥೆಗಳ) ಸಹಕಾರದಿಂದ ಶಾಲಾ ಕಟ್ಟಡದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸುವುದು ಹಾಗೂ ಅಗತ್ಯಾನುಸಾರ, ಸಂದರ್ಭಾನುಸಾರ ಶಾಲಾ ಮುಖ್ಯೋಪಾಧ್ಯಾಯರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಅವರ ಪೂರ್ವಾನುಮತಿ ಪಡೆದು ಶಾಲೆಗಳಿಗೆ ರಜೆ ಘೋಷಿಸುವುದು. ಅಂತಹ ರಜಾ ದಿನಗಳಲ್ಲಿನ ಪಾಠ - ಪ್ರವಚನಗಳನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಸರಿದೂಗಿಸುವಂತೆ ಸೂಚಿಸಿದೆ.
ಮಾರ್ಗದರ್ಶನದೊಂದಿಗೆ ಅಗತ್ಯ ಕ್ರಮ: ಈ ಮೇಲ್ಕಂಡ ಎಲ್ಲ ಅಂಶಗಳನ್ನು ಹಾಗೂ ಸುತ್ತೋಲೆಯಲ್ಲಿ ಈ ಸಂಬಂಧ ಈಗಾಗಲೇ ತಿಳಿಸಿರುವ ಎಲ್ಲಾ ಅಂಶಗಳನ್ನು ಕಟ್ಟನಿಟ್ಟಾಗಿ ಪಾಲಿಸುವುದು ಹಾಗೂ ಸ್ಥಳೀಯ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಮತ್ತು ತಾಲೂಕು, ಜಿಲ್ಲಾಡಳಿತಗಳ ಸಹಕಾರದೊಂದಿಗೆ ಹಾಗೂ ಮಾರ್ಗದರ್ಶನದೊಂದಿಗೆ ಅಗತ್ಯ ಕ್ರಮಗಳನ್ನು ಸಕಾಲದಲ್ಲಿ ಕೈಗೊಳ್ಳುವುದು.
ಮಳೆಯಿಂದ ಯಾವುದೇ ವಿದ್ಯಾರ್ಥಿ, ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ, ಶಾಲೆಯ ಆವರಣದಲ್ಲಿ, ಶಾಲೆಯ ಸುತ್ತ-ಮುತ್ತ ಯಾವುದೇ ರೀತಿಯ ತೊಂದರೆ ಅಥವಾ ಜೀವಕ್ಕೆ ಹಾನಿ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಹಾಗೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಶಾಲೆಗಳನ್ನು ನಡೆಸಿಕೊಂಡು ಹೋಗುವಂತೆ ಈ ಮೂಲಕ ಸೂಚಿಸಿದೆ.
ಓದಿ: ಉದ್ಯೋಗ ಸೃಷ್ಟಿಗೆ ನಾವು ಸ್ಥಾಪಿಸಿದ್ಧ ಸಂಸ್ಥೆಗಳನ್ನೇ ಕೇಂದ್ರ ಸರ್ಕಾರ ಮಾರಾಟ ಮಾಡ್ತಿದೆ: ಡಿಕೆಶಿ