ಬೆಂಗಳೂರು : ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂವಿಧಾನದ ಯಾವುದೇ ಕೆಲಸಗಳು ಕಾರ್ಯಗತವಾಗುತ್ತಿಲ್ಲ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಪ್ರಮಾಣ ವಚನ ಮಾಡಿ ಅಧಿಕಾರ ವಹಿಸಿಕೊಂಡ ಸಿಎಂಗೆ ನೈತಿಕತೆ ಇದ್ದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯಬಾರದು ಎಂದರು.
ವಿಧಾನಸೌಧದಲ್ಲಿ ಗೂಂಡಾಗಿರಿ ಆರಂಭಗೊಂಡಿದೆ. ಮಂತ್ರಿಗಳೇ ಶಾಸಕರ ಮೇಲೆ ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಶಾಸಕರ ಕೊರಳಪಟ್ಟಿ ಹಿಡಿದು ರೂಮಿನಲ್ಲಿ ಕೂಡಿ ಹಾಕಿ ಹಲ್ಲೆ ಮಾಡುತ್ತಿದ್ದಾರೆ. ಇದನ್ನೆಲ್ಲಾ ನೋಡಿದರೆ ರಾಜ್ಯದಲ್ಲಿ ಚುನಾಯಿತ ಸರ್ಕಾರ ಇಲ್ಲ ಎನಿಸುತ್ತಿದೆ ಎಂದರು.
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೂಡಲೇ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು.