ಬೆಂಗಳೂರು: ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಯಡಿಯೂರಪ್ಪ ನಿವಾಸ ಧವಳಗಿರಿಗೆ ಆಗಮಿಸಿ ಉತ್ತರಾಖಂಡ ಸಿಎಂ ಭೇಟಿ ಮಾಡಿ ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆಯಾದ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮದ ಕುರಿತು ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಚರ್ಚಿಸಿದರು. ಇದೇ ವೇಳೆ, ಏಕ ಭಾರತ್ ಶ್ರೇಷ್ಠ ಭಾರತ್ ಕಾರ್ಯಕ್ರಮದ ಕುರಿತು ಸಹ ಉಭಯ ರಾಜ್ಯದ ಸಿಎಂ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ.

ಕರ್ನಾಟಕದ ವಿದ್ಯಾರ್ಥಿಗಳು ಈಗಾಗಲೇ ಉತ್ತರಾಖಂಡ ರಾಜ್ಯಕ್ಕೆ ಭೇಟಿ ನೀಡಿದ್ದು, ಅಲ್ಲಿನ ವಿದ್ಯಾರ್ಥಿಗಳು ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇದರೊಂದಿಗೆ ಎರಡೂ ರಾಜ್ಯಗಳ ಅಭಿವೃದ್ಧಿ ಚಟುವಟಿಕೆಗಳು, ಪರಸ್ಪರ ಸಹಕಾರ ಮೊದಲಾದ ಅಂಶಗಳ ಕುರಿತು ಚರ್ಚಿಸಿದರು.