ಬೆಳಗಾವಿ: ತಾಲೂಕಿನ ಸುವರ್ಣ ವಿಧಾನಸೌಧದ ಆಡಿಟೋರಿಯಂ ಹಾಲ್ ನಲ್ಲಿ ಹಮ್ಮಿಕೊಂಡ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 79 ಮಂದಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು.
ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಆನ್ ಲೈನ್ ಮೂಲಕವೇ ಘಟಿಕೋತ್ಸವ ಭಾಷಣ ಮಾಡಿದ ಬೆಂಗಳೂರಿನ ನ್ಯಾಕ್ ನಿರ್ದೇಶಕ ಪ್ರೊ.ಎಸ್.ಸಿ. ಶರ್ಮಾ, ರಾಷ್ಟ್ರ ನಿರ್ಮಾಣದ ಪ್ರಕ್ರಿಯೆಯಲ್ಲಿ ರಾಷ್ಟ್ರೀಯವಾದ ಅಥವಾ ರಾಷ್ಟ್ರೀಯತೆಯ ಪಾತ್ರ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ನವ ಪದವೀಧರರು ದೇಶದ ಪ್ರಗತಿಯ ಚಕ್ರಗಳಿದ್ದಂತೆ. ಆದ್ದರಿಂದ ಎಲ್ಲರೂ ಭಾರತೀಯತೆಯನ್ನು ಮೈಗೂಡಿಸಿಕೊಂಡು ಭವಿಷ್ಯದ ನಾಯಕರಾಗಿ ಹೊರ ಹೊಮ್ಮಬೇಕು. ಚಾಣಕ್ಯ ನೀತಿಯಲ್ಲಿ ಉಲ್ಲೇಖಿಸಿರುವಂತೆ ಜ್ಞಾನವನ್ನು ಮಾತೃಸ್ಥಾನಕ್ಕೆ ಹೋಲಿಕೆ ಮಾಡಲಾಗಿದೆ. ಅನಾದಿ ಕಾಲದಿಂದಲೂ ಶಿಕ್ಷಣಕ್ಕೆ ನೀಡಲಾಗಿರುವ ಮಹತ್ವವನ್ನು ಅರಿತು ಪ್ರಸ್ತುತ ಸನ್ನಿವೇಶದಲ್ಲಿ ನಮ್ಮೆದುರಿಗಿರುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ನವ ಪದವೀಧರರು ಹೆಚ್ಚಿನ ಜ್ಞಾನ-ಕೌಶಲ್ಯವನ್ನು ಅಳವಡಿಸಿಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಗೌರವ ಡಾಕ್ಟರೇಟ್: ಘಟಿಕೋತ್ಸವ ಸಮಾರಂಭದಲ್ಲಿ ಕ್ರೀಡಾ ಮತ್ತು ಸಮಾಜ ಸೇವೆಯ ಕ್ಷೇತ್ರಕ್ಕಾಗಿ ಕೆ. ಗೋವಿಂದರಾಜ್ ಹಾಗೂ ಧಾರ್ಮಿಕ ಮತ್ತು ಸಮಾಜ-ಶೈಕ್ಷಣಿಕ ಕ್ಷೇತ್ರಕ್ಕಾಗಿ ಹುಬ್ಬಳ್ಳಿಯ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ರಾಜಯೋಗೀಂದ್ರ ಮಹಾಸ್ವಾಮಿಗಳು ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
33,974 ಜನರಿಗೆ ಪದವಿ: ಸದರಿ ಘಟಿಕೋತ್ಸವದಲ್ಲಿ ಸ್ನಾತಕ ಪದವಿ ಪಡೆದ 31,262 ವಿದ್ಯಾರ್ಥಿಗಳಲ್ಲಿ 77 ಜನ ವಿದ್ಯಾರ್ಥಿಗಳು ರ್ಯಾಂಕ ಪಡೆದಿದ್ದು, 11 ಜನರಿಗೆ ಘಟಿಕೋತ್ಸವದಲ್ಲಿ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು. ಸ್ನಾತಕೋತ್ತರ ಪದವಿ ಪಡೆದ 2,712 ವಿದ್ಯಾರ್ಥಿಗಳಲ್ಲಿ 68 ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದು, 22 ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪ್ರಮಾಣ ಪತ್ರ ನೀಡಲಾಯಿತು. ಸ್ನಾತಕ ಹಾಗೂ ಸ್ನಾತಕೋತ್ತರ ತರಗತಿಯ ಒಟ್ಟು 33,974 ವಿದ್ಯಾರ್ಥಿಗಳು ಪದವಿಯನ್ನು ಘನತೆವೆತ್ತ ರಾಜ್ಯಪಾಲರು ಪ್ರಕಟಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತ ತ್ಯಾಗರಾಜನ್, ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ಆಯುಕ್ತ ಗೀತಾ ಬಿ.ವಿ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ ಇದ್ದರು.