ಅಥಣಿ: ಹವಾಮಾನ ವೈಪರೀತ್ಯದಿಂದ ಈ ಬಾರಿ ದ್ರಾಕ್ಷಿ ಬೆಳೆಗೆ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಬೆಳೆ ಹಾನಿ ವರದಿ ಸಲ್ಲಿಸಲಾಗಿದೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ.
ತಾಲೂಕಿನ ಖೋತನಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಗೆ ನೆರೆ ಹಾನಿ ವೈಮಾನಿಕ ಸಮೀಕ್ಷೆ ಆಗಮಿಸಿದ ಮುಖ್ಯಮಂತ್ರಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿರುವ ಸಂದರ್ಭದಲ್ಲಿ ಅಥಣಿ ತಾಲೂಕಿನ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.
ತಾಲೂಕಿನಲ್ಲಿ ಒಂದು ಕಡೆ ಕೃಷ್ಣಾ ನದಿಯಿಂದ ಅತಿವೃಷ್ಟಿ ಸಂಭವಿಸಿದರೆ, ಮಹಾರಾಷ್ಟ್ರ ಹಾಗೂ ವಿಜಯಪುರ ಜಿಲ್ಲೆಗೆ ಗಡಿ ಹೊಂದಿರುವ ಅಥಣಿ ತಾಲೂಕಿನ ಈ ಭಾಗಗಳಲ್ಲಿ ಅನಾವೃಷ್ಟಿ ಆಗುತ್ತದೆ. ಇದರಿಂದ ಅಥಣಿ ತಾಲೂಕಿನಲ್ಲಿ 4 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ಬೆಳೆದಿದ್ದಾರೆ. ಈ ಬಾರಿ ಹವಾಮಾನ ವೈಪರೀತ್ಯದಿಂದ ದ್ರಾಕ್ಷಿ ಬೆಳೆಗಾರರು ನಷ್ಟ ಸಂಭವಿಸಿದ್ದಾರೆ. ನಾನು ಹಾಗೂ ಬೆಳಗಾವಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಂಘದ ನಿರ್ದೇಶಕ ಸಿದ್ದಪ್ಪ ಮುದಕನ್ನವರ ಜೊತೆಯಾಗಿ ಸಿಎಂ ಅವರಿಗೆ ದ್ರಾಕ್ಷಿ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಬೋರ್ಡ್ ರಚನೆ ಮಾಡಬೇಕೆಂದು ಮನವಿ ಜೊತೆಗೆ ವರದಿ ಸಲ್ಲಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿಯವರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ 6700 ಹೆಕ್ಟೇರ್ ದ್ರಾಕ್ಷಿ ಬೆಳೆದಿದ್ದು, ಅದರಲ್ಲಿ ಅಥಣಿ ತಾಲೂಕಿನಲ್ಲಿಯೇ 4 ಸಾವಿರ ಹೆಕ್ಟೇರ್ ದ್ರಾಕ್ಷಿ ಬೆಳೆದಿದ್ದಾರೆ. ಎರಡು ತಿಂಗಳಿಂದ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ ದ್ರಾಕ್ಷಿ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದು, ಆದಷ್ಟು ಬೇಗ ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.