ಬೆಳಗಾವಿ : ರಸ್ತೆ ಪಕ್ಕ ಪ್ರತಿಷ್ಠಾಪಿಸಿದ್ದ ವೀರರಾಣಿ ಚನ್ನಮ್ಮಾಜಿ ಮೂರ್ತಿಯನ್ನು ತೆರವುಗೊಳಿಸಿ, ಹೋರಾಟಗಾರರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಧಾಮಣೆ ಗ್ರಾ.ಪಂ ವ್ಯಾಪ್ತಿಯ ಕುರುಬರಹಟ್ಟಿ ಗ್ರಾಮದಲ್ಲಿ ಇಂದು ನಡೆದಿದೆ.
ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ವೀರರಾಣಿ ಚನ್ನಮ್ಮನ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಗ್ರಾಮಸ್ಥರು ಮುಂದಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಆಗಮಿಸಿದ ಪೊಲೀಸರು, ಸಮಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಯಾವುದೇ ಕಾರಣಕ್ಕೂ ಮೂರ್ತಿ ಸೇರಿದಂತೆ ಇನ್ನಿತರ ಯಾವುದೇ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅವಕಾಶ ಇಲ್ಲ. ಆದ್ದರಿಂದ, ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅವಕಾಶ ನೀಡಲ್ಲ ಎಂದು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.
ಈ ವೇಳೆ ಪೊಲೀಸರು ತಿಳಿಹೇಳಿ ಮನವೊಲಿಸಲು ಹರಸಾಹಸಪಟ್ಟಿದ್ದಾರೆ. ಬಳಿಕ ಮಾತಿನ ಚಕಮಕಿ ಅತಿರೇಕಕ್ಕೆ ಹೋಗಿದ್ದು ಅಂತಿಮವಾಗಿ ಪೊಲೀಸರು ಪ್ರತಿಷ್ಠಾಪನೆಗೆಂದು ತರಲಾಗಿದ್ದ ಚನ್ನಮ್ಮಳ ಪುತ್ಥಳಿಯನ್ನು ವಶಕ್ಕೆ ಪಡೆಯಲು ಯತ್ನಿಸಿದ್ದಾರೆ. ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಕೆಲ ಯುವಕರನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾಗುತ್ತಿದ್ದಂತೆ, ಗ್ರಾಮಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
''ಮನೆಯ ಕಟ್ಟೆಯ ಮೇಲೆ ಕುಳಿತ್ತಿದ್ದ ಪಾರ್ಶ್ವವಾಯು ತಂದೆಯನ್ನು ಎಳೆದಾಡಿ ಪೊಲೀಸ್ ವಾಹನದಲ್ಲಿ ಕೂರಿಸಿದ್ದರು. ತಂದೆಯನ್ನು ಬಿಡಿಸಲು ಹೋದ ನನಗೂ ಹೊಡೆದಿದ್ದಾರೆ. ನನ್ನ ಭವಿಷ್ಯ ಹಾಳಾದ್ರೂ ಚಿಂತೆಯಿಲ್ಲ. ಚನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಆಗಲೇಬೇಕು'' ಎಂದು ಕಾಲೇಜು ವಿದ್ಯಾರ್ಥಿನಿ ರೋಷನಿ ತಿಳಿಸಿದರು.
"ಕುರುಬರಹಟ್ಟಿ ಗ್ರಾಮದಲ್ಲಿ ಚನ್ನಮ್ಮನ ಮೂರ್ತಿ ಕೂರಿಸಲು 10 ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ. ಆದರೆ, ಪಂಚಾಯತ್ ವತಿಯಿಂದ ನಮಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ, ಇವತ್ತು ಯುವಕರು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಮೂರ್ತಿ ತೆರವು ಮಾಡಿ ನಮ್ಮ ಮೇಲೂ ಸಹ ಪೊಲೀಸರು ಹಲ್ಲೆ ಮಾಡಿದ್ದಾರೆ" ಎಂದು ಇಲ್ಲಿನ ಮಹಿಳೆಯರು ಆರೋಪಿಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ದಾವಣಗೆರೆ: ನೆಚ್ಚಿನ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ