ಬೆಳಗಾವಿ: ರಾಜ್ಯದ ನೆಲ, ಜಲ ಹಾಗೂ ಜನರ ರಕ್ಷಣೆಗೆ ಸರ್ಕಾರ ಸಿದ್ಧವಿದೆ. ಇದಲ್ಲದೆ ಉತ್ತರ ಕರ್ನಾಟಕ ಅಭಿವೃದ್ಧಿ ಸೇರಿದಂತೆ ಕೃಷ್ಣಾ ಯೋಜನೆಯಡಿ ರಾಜ್ಯದ ಪಾಲಿನ ನೀರಿನ ಸಂಪೂರ್ಣ ಬಳಕೆಗೆ ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಂಕೇಶ್ವರ ಪಟ್ಟಣದಲ್ಲಿರುವ ನೇಸರಿ ಗಾರ್ಡನ್ನಲ್ಲಿ ಹಮ್ಮಿಕೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜಕಾರಣದಲ್ಲಿ ಬಹಳಷ್ಟು ಏಳು-ಬೀಳುಗಳನ್ನು ನೋಡಿದ್ದೇನೆ. ಅಧಿಕಾರ ಶಾಶ್ವತವಲ್ಲ ಅಂದುಕೊಂಡು ಪ್ರತಿದಿನ ಕೆಲಸ ಮಾಡುತ್ತೇವೆ. ಜನ ಎಲ್ಲಿಯವರೆಗೆ ನಮ್ಮನ್ನು ಪ್ರೀತಿ ಮಾಡುತ್ತಾರೋ ಅಲ್ಲಿಯವರೆಗೆ ನಾವು ಅಧಿಕಾರದಲ್ಲಿ ಇರುತ್ತೇವೆ. ಹೀಗಾಗಿ ಜನರ ಹೃದಯದಲ್ಲಿ ಇರುವ ಹಾಗೆ ಕೆಲಸ ಮಾಡಬೇಕು. ಯಾರು ಜನರ ಸಲುವಾಗಿ ರಾಜಕಾರಣ ಮಾಡುತ್ತಾರೆ. ಅವರು ಪ್ರಸ್ತುತವಾಗಿರುತ್ತಾರೆ. ಯಾರೂ ಅಧಿಕಾರ ಆಸೆಗಾಗಿ ರಾಜಕಾರಣ ಮಾಡ್ತಾರೆ ಅವರು ಪ್ರಸ್ತುತವಾಗಿರಲು ಸಾಧ್ಯವೇ ಇಲ್ಲ ಎಂದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಸರ್ಕಾರ ನಡೆಯುತ್ತಿದೆ. ಬಿಎಸ್ವೈ ಸಾಕಷ್ಟು ಯೋಜನೆಗಳಿಗೆ ಅನುಮೋದನೆ ಕೊಟ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ನಾನು ರಿಬನ್ ಕಟ್ಟ ಮಾಡುತ್ತಿದ್ದೇನಷ್ಟೇ. ನಮಗೆ ಯಾರು ಉಪಕಾರ ಮಾಡಿರುತ್ತಾರೋ ಅವರನ್ನು ಸ್ಮರಿಸಬೇಕು ಎಂದರು.
ಜನರ ಸುತ್ತಲೂ ಅಭಿವೃದ್ಧಿ ಆಗಬೇಕು. ಅಭಿವೃದ್ಧಿ ಸುತ್ತಲೂ ಜನರು ಓಡಾಡಬೇಕು. ತಾಲೂಕು, ಜಿಲ್ಲಾ ಕಚೇರಿಗಳಿಗೆ ಜನರು ಓಡಾಡೋದನ್ನು ತಪ್ಪಿಸಬೇಕು. ಆ ನಿಟ್ಟಿನಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೇಗ ಕೊಡುವ ಮೂಲಕ ಜನರ ಮನೆಗೆ ಆಡಳಿತ ತೆಗೆದುಕೊಂಡು ಹೋಗಲಾಗುತ್ತಿದೆ. ನಾನು ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಘೋಷಣೆ ಮಾಡಿದ್ದೇನೆ. ಇದುವರೆಗೆ ಯಾವ ರಾಜ್ಯವೂ ಮಾಡದ ಕೆಲಸವನ್ನು ಕರ್ನಾಟಕ ಸರ್ಕಾರ ಮಾಡಿದೆ. ಸೂಕ್ತ ವ್ಯವಸ್ಥೆ ಲಭ್ಯವಾದರೆ ರಾಜ್ಯದಲ್ಲಿ ವಿದ್ಯುತ್ ವಿತರಣೆ ವ್ಯವಸ್ಥೆಯನ್ನು ವಿಕೇಂದ್ರೀಕರಣಕ್ಕೆ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಸರ್ಕಾರಿ ಸೇವೆಗಳ ವಿಕೇಂದ್ರೀಕರಣ:
ಜನವರಿ 26ರಿಂದ ಐದು ಜಿಲ್ಲೆಗಳಲ್ಲಿ ಸರ್ಕಾರದ ಪ್ರತಿಯೊಂದು ಸೇವೆಗಳನ್ನು ಗ್ರಾಮ ಪಂಚಾಯಿತಿ ಮೂಲಕ ನೀಡುವ ವ್ಯವಸ್ಥೆ ಮಾಡಲಾಗುವುದು. ಸರ್ಕಾರಿ ಸೇವೆಗಳ ವಿಕೇಂದ್ರೀಕರಣ ಮಾಡುವ ಮೂಲಕ ಜನರ ಮನೆಬಾಗಿಲಿಗೆ ಸೇವೆ ಒದಗಿಸಲಾಗುವುದು. ಇದಕ್ಕೆ ಸರ್ಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ರೈತರ ಮಕ್ಕಳಿಗೆ ಶಿಷ್ಯವೇತನ ಒದಗಿಸುವ ಮೂಲಕ ಅವರ ಬದುಕಿಗೆ ಆಸರೆಯಾಗಲಿದೆ. ರೈತರ ಮಕ್ಕಳು ಬೇರೆ ಬೇರೆ ರೀತಿಯ ವೃತ್ತಿಶಿಕ್ಷಣ ಪಡೆಯಲು ಈ ಯೋಜನೆ ಸಹಕಾರಿಯಾಗಲಿದೆ. ಅಮೃತ ಯೋಜನೆಗಳ ಜಾರಿ ಮೂಲಕ ಹಳ್ಳಿಗಳ ಪ್ರಗತಿಗೆ ಸರ್ಕಾರ ಮುಂದಾಗಿದೆ ಎಂದರು.
![CM Basavaraj bommai](https://etvbharatimages.akamaized.net/etvbharat/prod-images/kn-ckd-04-25-cm-program-ka10029_25092021201136_2509f_1632580896_191.jpg)
ಏತ ನೀರಾವರಿ ಯೋಜನೆಗಳಿಗೆ ಶೀಘ್ರ ಚಾಲನೆ:
ಶಂಕರಲಿಂಗ ಏತ ನೀರಾವರಿ ಹಾಗೂ ಅಡವಿ ಸಿದ್ಧೇಶ್ವರ ಏತ ನೀರಾವರಿ ಯೋಜನೆಗಳನ್ನು ಶೀಘ್ರ ಆರಂಭಿಸಲಾಗುವುದು. ಅದೇ ರೀತಿ ಆರು ಬ್ಯಾರೇಜ್ ತುಂಬಿಸಲು ಆದಷ್ಟು ಬೇಗನೆ ಮಂಜೂರಾತಿ ನೀಡಲಾಗುವುದು. ಪ್ರಧಾನಮಂತ್ರಿಗಳ ದೂರದೃಷ್ಟಿಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಒಟ್ಟಾರೆ ಅಭಿವೃದ್ಧಿ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ ಎಂದೇಳಿದರು.
![CM Basavaraj bommai](https://etvbharatimages.akamaized.net/etvbharat/prod-images/13174204_thumbn.jpg)
ವಸತಿ ಕಲ್ಪಿಸಲು 50 ಎಕರೆ ಜಮೀನು ಹಸ್ತಾಂತರ:
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸಂಕೇಶ್ವರ ಹೋಬಳಿಯ ಹರಗಾಪುರ ಗ್ರಾಮದ ಸರ್ಕಾರಿ ಗಾಯರಾಣದ 50 ಎಕರೆ ಜಮೀನನ್ನು ವಸತಿ ರಹಿತರಿಗೆ ವಸತಿ ಕಲ್ಪಿಸಲು ಸಂಕೇಶ್ವರ ಪುರಸಭೆಗೆ ಹಸ್ತಾಂತರಿಸಿದರು.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧ-ಶ್ರೀರಾಮುಲು
ಮುಖ್ಯ ಅತಿಥಿಯಾಗಿ ಮಾತನಾಡಿದ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಬಿ.ಶ್ರೀರಾಮುಲು, ಮುಖ್ಯಮಂತ್ರಿಗಳು ಅಭಿವೃದ್ಧಿಯ ಕಲ್ಪನೆಯನ್ನು ಸಣ್ಣ ಪಟ್ಟಣ ಹಾಗೂ ಗ್ರಾಮಗಳ ಕಡೆಗೆ ತೆಗೆದುಕೊಂಡು ಹೋಗುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಬಣ್ಣಿಸಿದರು.
ರಾಜ್ಯದ ನಾಗರಿಕರು ಸರಕಾರಿ ಬಸ್ಗಳಲ್ಲಿ ಸುರಕ್ಷಿತ ಹಾಗೂ ನೆಮ್ಮದಿಯಿಂದ ಪ್ರಯಾಣ ಕೈಗೊಳ್ಳಲು ಎಲ್ಲಾ ಅಗತ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅಭಿವೃದ್ಧಿ ಕೆಲಸಗಳು ಡಬಲ್ ಎಂಜಿನ್ ಗಾಡಿಯಂತೆ ನಾಗಾಲೋಟದಲ್ಲಿ ಸಾಗಿವೆ ಎಂದರು.
ಸಂಪೂರ್ಣ ಒಳಚರಂಡಿ ವ್ಯವಸ್ಥೆ- ಸಚಿವ ಭೈರತಿ ಭರವಸೆ
ಬಳಿಕ ನಗರಾಭಿವೃದ್ಧಿ ಇಲಾಖೆಯ ಸಚಿವ ಭೈರತಿ ಬಸವರಾಜ ಮಾತನಾಡಿ, ಸರ್ಕಾರ ಜನರ ಮನೆಬಾಗಿಲಿಗೆ ಎಂಬ ಯೋಜನೆಯನ್ನು ಮುಖ್ಯಮಂತ್ರಿಗಳು ಜಾರಿಗೆ ತಂದಿದ್ದಾರೆ. ಇದೇ ರೀತಿ ವಿನೂತನ ಯೋಜನೆಗಳನ್ನು ರೂಪಿಸಲಿದ್ದಾರೆ. ಸಂಕೇಶ್ವರ ಪಟ್ಟಣದಲ್ಲಿ 110 ಕೋಟಿ ವೆಚ್ಚದಲ್ಲಿ ಸಂಪೂರ್ಣ ಒಳಚರಂಡಿ ವ್ಯವಸ್ಥೆಯನ್ನು ನಮ್ಮ ಸರ್ಕಾರದ ಅವಧಿಯಲ್ಲಿ ಮಾಡುತ್ತೇವೆ. ಇಡೀ ರಾಜ್ಯದಲ್ಲಿ ಹಂತ-ಹಂತವಾಗಿ ಒಳಚರಂಡಿ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ದೀಪಾಲಂಕಾರದಿಂದ ಕಂಗೊಳಿಸಿದ ಸಂಕೇಶ್ವರ ಪಟ್ಟಣ :
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಸಿಎಂ ಬೊಮ್ಮಾಯಿಯವರು ಸಂಕೇಶ್ವರ ಪಟ್ಟಣಕ್ಕೆ ಆಗಮಿಸಿದ ವೇಳೆ ಹುಕ್ಕೇರಿ ತಾಲೂಕು ಆಡಳಿತ ಡೊಳ್ಳು ಕುಣಿತದ ಮೂಲಕ ಭರ್ಜರಿಯಾಗಿ ಸ್ವಾಗತಿಸಿತು. ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದ ಪಟ್ಟಣ ವಿದ್ಯುತ್ ದೀಪಗಳ ಅಲಂಕಾರದಿಂದ ಜಗಮಗಿಸುತ್ತಿತ್ತು. ಸಿಎಂ ಸಂಚರಿಸುವ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಸಿಎಂ ಸಂಕೇಶ್ವರ ಪಟ್ಟಣದಲ್ಲಿ 4 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡ ಬಸ್ ನಿಲ್ದಾಣ ಉದ್ಘಾಟನೆ ಮಾಡಿದರು. ಬಳಿಕ ಪುರಸಭೆ ನೂತನ ಆಡಳಿತ ಕಚೇರಿಯ ಉದ್ಘಾಟನೆ ನೆರವೇರಿಸಿದರು. ಇದಲ್ಲದೆ ಹುಕ್ಕೇರಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.