ಅಥಣಿ : ಕೊರೊನಾ ಕಾರಣದಿಂದಾಗಿ ಕಳೆದ ವರ್ಷ ಜವಳಿ ಇಲಾಖೆಗೆ ಹೆಚ್ಚಿನ ಅನುದಾನ ಬಿಡುಗಡೆ ಆಗಿರಲಿಲ್ಲ. ಆದರೆ, ಈ ಬಾರಿಯ ಬಜೆಟ್ನಲ್ಲಿ ಜವಳಿ ಇಲಾಖೆ ಹಾಗೂ ಬೆಳಗಾವಿಗೆ ಸಿಎಂ ಯಡಿಯೂರಪ್ಪ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಾರೆ ಎಂಬ ಭರವಸೆ ಇದೆ ಎಂದು ಸಚಿವ ಶ್ರೀಮಂತ ಪಾಟೀಲ ಹೇಳಿದರು.
ಸಚಿವರು ಸ್ವಗ್ರಾಮ ಶಿನಾಳಕ್ಕೆ ಭೇಟಿ ನೀಡಿದ್ದ ವೇಳೆ ಈಟಿವಿ ಭಾತರದೊಂದಿಗೆ ಮಾತನಾಡಿದ ಅವರು, ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಜವಳಿ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದಿದ್ದಾರೆ ಎಂದು ಮಾಹಿತಿ ನೀಡಿದರು.
ತೈಲಬೆಲೆ ಏರಿಕೆಯಿಂದ ಪಂಚ ರಾಜ್ಯಗಳ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವನ್ನು ಜನತೆ ಮೆಚ್ಚಿದ್ದಾರೆ. ಈ ಬಾರಿ ಐದು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹಾಗೂ ಬೆಂಬಲಿತ ಸ್ಥಳೀಯ ಪಕ್ಷಗಳ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದರು.
ಓದಿ: ಶಿಕ್ಷಣ ಸಂಸ್ಥೆಗಳ ಖಾಲಿ ಹುದ್ದೆ ಭರ್ತಿಗೆ ಸಮ್ಮತಿ : ಸಿಎಂಗೆ ಧನ್ಯವಾದ ಸಲ್ಲಿಸಿದ ಸುರೇಶ್ ಕುಮಾರ್
ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಅವರು ಸಿಂದಗಿ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಕುರಿತಂತೆ ನನಗೆ ಮಾಹಿತಿ ಇಲ್ಲ ಎಂದರು.
ಉಪ ಸಮರದಲ್ಲಿ ಬಿಜೆಪಿ ಗೆಲ್ಲಲಿದೆ : ರಾಜ್ಯದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಮ್ಮನ್ನು ಯಾವ ಕ್ಷೇತ್ರಕ್ಕೆ ಉಸ್ತುವಾರಿ ನೇಮಿಸುತ್ತಾರೋ ಅಲ್ಲಿಗೆ ಹೋಗಿ ಪ್ರಚಾರ ಮಾಡುತ್ತೇವೆ ಎಂದರು.