ಬೆಳಗಾವಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಆ.10 ಮಧ್ಯಾಹ್ನ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ನೀಡಿರುವ ಮೊಬೈಲ್ ಸಂಖ್ಯೆಗಳಿಗೆ ಫಲಿತಾಂಶ ಬರಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಕೊರೊನಾ ಸೋಂಕಿನ ನಡುವೆಯೂ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 74,014 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು ತಾಳ್ಮೆ ಮತ್ತು ಧೈರ್ಯದಿಂದ ಸ್ವೀಕರಿಸಬೇಕು. ಪಾಲಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಿಗೆ ಮನೋಬಲ ತುಂಬುವ ಕೆಲಸ ಮಾಡಬೇಕು ಎಂದರು.
ಕೋವಿಡ್-19 ಸಂದರ್ಭದಲ್ಲಿ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿದ್ದೀರಿ. ಎಸ್ಸೆಸ್ಸೆಲ್ಸಿ ಫಲಿತಾಂಶವು ಸಂತಸದಾಯಕ ಹಾಗೂ ಉತ್ತಮವಾಗಿ ಬರುವ ನಿರೀಕ್ಷೆ ಇದೆ. ಫಲಿತಾಂಶದಲ್ಲಿ ವಿದ್ಯಾರ್ಥಿಗಳು ವಿಫಲಗೊಂಡಲ್ಲಿ ಧೃತಿಗೆಡದೇ, ಸಪ್ಟೆಂಬರ್ದಲ್ಲಿ ಬರುವ ಪೂರಕ ಪರೀಕ್ಷೆಯನ್ನು ಎದುರಿಸಲು ತಯಾರಾಗಬೇಕು ಎಂದು ತಿಳಿಸಿದರು.
ಮಕ್ಕಳ ಕಲಿಕೆಯನ್ನು ಉತ್ತಮಪಡಿಸಲು ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸದಾ ತಮ್ಮೊಂದಿಗೆ ಇರಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಭರವಸೆ ನೀಡಿದರು.