ಅಥಣಿ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ಅಥಣಿಯ ವಿವಿಧ ಸಂಘಟನೆಗಳು ಸಾಮೂಹಿಕವಾಗಿ ಪ್ರತಿಭಟನೆ ನಡೆಸಿ ಡಿಸಿಎಂ ಲಕ್ಷ್ಮಣ ಸವದಿ ಅಥಣಿಯಲ್ಲಿನ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಕರ್ನಾಟಕ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಿ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ, ಹಾಗೂ ನೆರೆ ಸಂತ್ರಸ್ತರ ಪರಿಹಾರ ವಿಳಂಬ ಬಗೆಹರಿಸುವಿಕೆ ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಮನೆಗೆ ಮುತ್ತಿಗೆ ಹಾಕಲು ಹೊರಟ ರೈತರನ್ನು ಅಂಬೇಡ್ಕರ್ ಸರ್ಕಲ್ನಲ್ಲಿ ಅಥಣಿ ಪೋಲಿಸರು ತಡೆದಿದ್ದಾರೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆದ ಈ ಪ್ರತಿಭಟನೆಯಲ್ಲಿ 60ಕ್ಕೂ ಅಧಿಕ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಮುಂಜಾಗ್ರತಾ ಕ್ರಮವಾಗಿ ಡಿಸಿಎಂ ಲಕ್ಷ್ಮಣ ಸವದಿ ನಿವಾಸ ಹಾಗೂ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ನಿವಾಸಗಳ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.