ಬೆಳಗಾವಿ: ಎಲ್ಲೆಡೆ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮನೆ ಮನೆಗೆ ತೆರಳಿ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡುವ ಮೂಲಕ ಸೋಂಕಿತರನ್ನು ಕೂಡಲೇ ಪತ್ತೆ ಮಾಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಉನ್ನತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರ್ಯಾಟ್(ರ್ಯಾಪಿಡ್ ಆಂಟಿಜನ್ ಟೆಸ್ಟ್ ) ಕಿಟ್ ಈಗ ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಸೋಂಕು ಪತ್ತೆ ಮಾಡಬೇಕು. ಶೇ.30 ರಷ್ಟು ರ್ಯಾಟ್ ಮಾಡಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆದಾಗ್ಯೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರ್ಯಾಟ್ ಪ್ರಮಾಣ ಕಡಿಮೆಯಿದೆ ಎಂದು ಹೇಳಿದರು.
ಸರಿಯಾದ ವಿಳಾಸ - ದೂರವಾಣಿ ಸಂಖ್ಯೆ ಸಂಗ್ರಹಿಸಲು ಸೂಚನೆ:
ಮಾದರಿ ಸಂಗ್ರಹಿಸುವ ಸಂದರ್ಭದಲ್ಲಿ ಸರಿಯಾದ ವಿಳಾಸವನ್ನು ಪಡೆದುಕೊಳ್ಳಬೇಕು. ತಪ್ಪು ವಿಳಾಸ ನೀಡುತ್ತಿರುವುದರಿಂದ ಕೋವಿಡ್ ತಪಾಸಣೆ ಉದ್ದೇಶ ಈಡೇರುತ್ತಿಲ್ಲ ಎಂದು ರವಿಕುಮಾರ್ ಅಭಿಪ್ರಾಯಪಟ್ಟರು. ತಪ್ಪು ವಿಳಾಸದಿಂದ ಸೋಂಕಿತರ ಚಿಕಿತ್ಸೆ ಹಾಗೂ ಐಸೋಲೇಷನ್ ಎರಡೂ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪರ್ಯಾಯ ದೂರವಾಣಿ ಸಂಖ್ಯೆ ಪಡೆಯಲು ನಿರ್ದೇಶನ ನೀಡಿದರು.
ಹೋಮ್ ಐಸೋಲೇಷನ್ನಲ್ಲಿ ಇರುವವರ ಮೇಲೆ ವಾರ್ ರೂಮ್ ಮೂಲಕ ನಿರಂತರ ನಿಗಾ ವಹಿಸಬೇಕು. ಸೋಂಕು ದೃಢಪಟ್ಟ ತಕ್ಷಣವೇ ಅಗತ್ಯ ಔಷಧ ಕಿಟ್ ನೀಡಬೇಕು ಎಂದು ನಿರ್ದೇಶನ ನೀಡಿದರು.
ಸೋಂಕಿತರಿಗೆ ಹತ್ತು ದಿನಗಳ ಕಾಲ ಆಸ್ಪತ್ರೆಯಲ್ಲಿ ನಿಗದಿತ ಚಿಕಿತ್ಸೆ ನೀಡಿದ ಬಳಿಕ ಕೊನೆಯ ಮೂರು ದಿನಗಳ ಕಾಲ ಅವರಲ್ಲಿ ಜ್ವರ ಕಂಡು ಬರದಿದ್ದರೆ ಅಂತಹವರನ್ನು ಡಿಸ್ಚಾರ್ಜ್ ಮಾಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ರವಿಕುಮಾರ್ ಸೂಚನೆ ನೀಡಿದರು.
ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಟೆಸ್ಟಿಂಗ್ ಪ್ರಮಾಣ ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸೋಂಕಿತರನ್ನು ಕೇರ್ ಸೆಂಟರ್ ಗೆ ದಾಖಲಿಸಿ:
ಇತ್ತೀಚಿನ ದಿನಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಹೋಮ್ ಐಸೋಲೇಷನ್ಗೆ ಆದ್ಯತೆ ನೀಡದೇ ಸ್ಥಳೀಯ ಕೋವಿಡ್ ಕೇರ್ ಕೇಂದ್ರಗಳಿಗೆ ಸೋಂಕಿತರನ್ನು ದಾಖಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ರವಿಕುಮಾರ್ ತಿಳಿಸಿದರು.
ಪ್ರತಿ ತಾಲೂಕು ಕೇಂದ್ರಗಳಲ್ಲಿ ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳನ್ನು ಆರಂಭಿಸಬೇಕು. ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕವಾಗಿ ಕೇಂದ್ರವನ್ನು ಆರಂಭಿಸಬೇಕು ಎಂದು ತಿಳಿಸಿದರು.
ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಅನ್ನು ಚುರುಕುಗೊಳಿಸಿ ಪ್ರತಿಯೊಬ್ಬ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸೇರಿಸಬೇಕು. ವೈದ್ಯರು ಸೇರಿದಂತೆ ಯಾವುದೇ ರೀತಿಯ ವೈದ್ಯಕೀಯ ಸಿಬ್ಬಂದಿ ಅಗತ್ಯವಿದ್ದರೆ ತಕ್ಷಣವೇ ನೇಮಕಾತಿ ನಡೆಸಬೇಕು. ಒಂದು ವೇಳೆ ತಜ್ಞ ವೈದ್ಯರು ಲಭ್ಯವಿಲ್ಲದಿದ್ದರೆ ಹೆಚ್ಚಿನ ಸಂಭಾವನೆ ನೀಡಿ ನೇಮಿಸಿಕೊಳ್ಳಬೇಕು ಎಂದರು.