ಬೆಳಗಾವಿ: ನೆರೆಯ ರಾಜ್ಯದಿಂದ ಬೆಳಗಾವಿ ಜಿಲ್ಲೆಗೆ ಆಗಮಿಸುವ ಜನರನ್ನು ತಪಾಸಣೆ ನಡೆಸಿದ ಬಳಿಕ ಅವರನ್ನು ಸಂಬಂಧಿಸಿದ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡಬೇಕು. ಈ ಕುರಿತು ಈಗಾಗಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ನಗರದ ಪ್ರವಾಸಿಮಂದಿರದ ಆವರಣದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಗಡಿ ಜಿಲ್ಲೆ ಬೆಳಗಾವಿಗೆ ಆಗಮಿಸುವ ಇತರೆ ಜಿಲ್ಲೆಯ ಜನರನ್ನು ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳ ಮೂಲಕ ಕಳಿಸಿಕೊಡಬೇಕು. ಬೇರೆ ರಾಜ್ಯಗಳಲ್ಲಿ ಮೃತಪಟ್ಟಿರುವವರನ್ನು ರಾಜ್ಯಕ್ಕೆ ಕರೆತರದೇ ಆಯಾ ರಾಜ್ಯಗಳಲ್ಲಿಯೇ ಅಂತ್ಯಕ್ರಿಯೆ ನಡೆಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದರೂ ಕೂಡ ಸುದೈವದಿಂದ ಜೀವಹಾನಿ ಪ್ರಮಾಣ ಕಡಿಮೆಯಾಗಿದೆ. ಇದುವರೆಗೆ ವೆಂಟಿಲೇಟರ್ ಬಳಕೆ ಹಂತಕ್ಕೆ ಪರಿಸ್ಥಿತಿ ತಲುಪಿಲ್ಲ. ಸೋಂಕಿತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ ನೆಗೆಟಿವ್ ಬಂದ ಬಳಿಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಿ ಅವರನ್ನು ಮನೆಗೆ ಕಳಿಸಬೇಕು ಎಂದರು.
ಎರಡು ತಿಂಗಳಿನ ವಿದ್ಯುಚ್ಛಕ್ತಿ ಬಿಲ್ ಒಮ್ಮೆಲೆ ನೀಡುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆಯೂ ಪರಿಶೀಲಿಸಿ ಜನರಿಗೆ ಅನುಕೂಲ ಕಲ್ಪಿಸಬೇಕೆಂದು ಹೆಸ್ಕಾಂ ಹಿರಿಯ ಅಧಿಕಾರಿಗಳ ಜತೆ ಸಭೆಯ ಮದ್ಯದಲ್ಲಿಯೇ ದೂರವಾಣಿಯ ಮೂಲಕ ಮಾತನಾಡಿದ ಸಚಿವರು, ಸಾರ್ವಜನಿಕರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕು ಮತ್ತು ಕಂತುಗಳಲ್ಲಿ ಬಿಲ್ ಪಾವತಿಸಲು ಅನುಕೂಲ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
ನಿರಂತರವಾಗಿ 45 ದಿನಗಳಿಗಿಂತ ಅಧಿಕ ಕಾಲ ಕಂಟೈನ್ಮೆಂಟ್ ಝೋನ್ ಆಗಿರುವ ಪ್ರದೇಶಗಳಲ್ಲಿ ಸ್ವಲ್ಪಮಟ್ಟಿಗೆ ವಿನಾಯಿತಿ ನೀಡುವುದರ ಬಗ್ಗೆ ಸರ್ಕಾರಕ್ಕೆ ಒಂದು ಪ್ರಸ್ತಾವ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅದೇ ರೀತಿ ದಾನಿಗಳಿಂದ ಅಗತ್ಯ ಸಾಮಗ್ರಿಗಳನ್ನು ಸಂಗ್ರಹಿಸಿ ಕಂಟೈನ್ಮೆಂಟ್ ಝೋನ್ನಲ್ಲಿ ವಿತರಿಸುವ ಬಗ್ಗೆಯೂ ಪರಿಶೀಲಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮಾತನಾಡಿ, ಜಿಲ್ಲೆಯಲ್ಲಿ 250 ವಲಸೆ ಕಾರ್ಮಿಕರಿದ್ದು, ಅವರ ಕ್ವಾರಂಟೈನ್ಗೆ ಆದ್ಯತೆ ನೀಡಲಾಗುವುದು. ಶೀಘ್ರ ಯಳ್ಳೂರ, ಪೀರನವಾಡಿ ಕಂಟೈನ್ಮೆಂಟ್ ಝೋನ್ ಆದೇಶ ಡಿನೋಟಿಫೈ ಮಾಡಲಾಗುವುದು. ಮೇ 15 ರ ಬಳಿಕ ಬೆಳಗಾವಿ ನಗರದ ಕಂಟೈನ್ಮೇಂಟ್ ಝೋನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ, ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರು, ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಚರ್ಚಿಸಿದರು.
ಸಂಸದ ಅಣ್ಣಾಸಾಹೇಬ್ ಜೊಲ್ಲೆ,ಡಾ. ಪ್ರಭಾಕರ್ ಕೋರೆ, ಶಾಸಕರಾದ ಅಭಯ್ ಪಾಟೀಲ, ಅನಿಲ ಬೆನಕೆ,ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಇದ್ದರು.