ಚಿಕ್ಕೋಡಿ: ಕೃಷ್ಣಾ ನದಿಗೆ ನೀರು ಹರಿಸಲು ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ.
ಮಹಾರಾಷ್ಟ್ರದ ಕೋಯ್ನಾ ಡ್ಯಾಂನಿಂದ ನೀರು ಹರಿಸಲು ಹಿಂದೇಟು ಹಾಕಲಾಗುತ್ತಿದೆ. ಕರ್ನಾಟಕ ಸರ್ಕಾರ ಹಿಡಕಲ್ ಬ್ಯಾರೇಜ್ನಿಂದ ಘಟಪ್ರಭಾ ಕಾಲುವೆ ಮೂಲಕ ಕೃಷ್ಣಾ ನದಿಗೆ ನೀರು ಹರಿಸಲು ಮುಂದಾಗಿದೆ. ಆದರೆ, ಕುಡಿಯುವ ನೀರಿನ ಸಮಸ್ಯೆ ಪುನಃ ಎದುರಾಗದಂತೆ ಸಮಸ್ಯೆ ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅಥಣಿ ಪತ್ರಕರ್ತರ ಸಂಘ, ನ್ಯಾಯವಾದಿಗಳ ಸಂಘ ಮತ್ತು ಕರವೇ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಮೂವತ್ತಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸಮಸ್ಯೆ ಬಗೆಹರಿಯುವವರೆಗೂ ನಿರಂತರ ಹೋರಾಟ ಮಾಡುವದಾಗಿ ಪ್ರತಿಭಟನಾಕಾರರು ಸರ್ಕಾರವನ್ನು ಎಚ್ಚರಿಸಿದ್ದಾರೆ.