ಅಥಣಿ: ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದಲ್ಲಿ ನಿರ್ಮಾಣವಾಗಲಿರುವ ವಾಣಿಜ್ಯ ಕಟ್ಟಡಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭೂಮಿ ಪೂಜೆ ನೆರವೇರಿಸಿದರು.
ಅಥಣಿಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಳೇ ಬಸ್ ನಿಲ್ದಾಣದ ಬಳಿ ನಿಗಮದ ವತಿಯಿಂದ ಸರಿ ಸುಮಾರು 67 ಲಕ್ಷ ರೂ. ವೆಚ್ಚದಲ್ಲಿ 15 ಕೊಠಡಿಗಳ ಕಟ್ಟಡ ನಿರ್ಮಾಣವಾಗುತ್ತಿದೆ.
ಈ ವೇಳೆ ಡಿಸಿಎಂ ಲಕ್ಷಣ್ ಸವದಿಗೆ ಮನವಿ ಸಲ್ಲಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಅಥಣಿ ಘಟಕದ ಸದಸ್ಯರು, ರಾಜ್ಯದಲ್ಲಿ 1 ಲಕ್ಷದ 30 ಸಾವಿರ ಕಾರ್ಮಿಕರು ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಅವರೆಲ್ಲರನ್ನು ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಮನವಿಗೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.