ಬೆಳಗಾವಿ: ಅಥಣಿಯಿಂದ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ಗೆ ಬಿಜೆಪಿಯಿಂದ ಮಹೇಶ್ ಕುಮಟಳ್ಳಿಗೆ ಟಿಕೆಟ್ ಪಕ್ಕಾ ಆಗುತ್ತಿದಂತೆ ಟಿಕೆಟ್ ಆಕಾಂಕ್ಷಿಯಾಗಿದ್ದ ಡಿಸಿಎಂ ಲಕ್ಷ್ಮಣ್ ಸವದಿಗೆ ಹಿನ್ನೆಡೆಯಾಗುವ ಎಲ್ಲ ಲಕ್ಷಣಗಳು ಕಾಣಿಸಿಕೊಳ್ಳತ್ತಿವೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಥಣಿಯಿಂದ ಸೋತರು ಅದೃಷ್ಟವೆಂಬತೆ ಡಿಸಿಎಂ, ಹಾಗೂ ಸಚಿವ ಸ್ಥಾನ ಮತ್ತು ಮಹಾರಾಷ್ಟ್ರ ಚುನಾವಣೆ ಉಸ್ತುವಾರಿಯನ್ನು ಸವದಿಗೆ ವಹಿಸಲಾಗಿತ್ತು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮಣ್ ಸವದಿ ಪ್ರಚಾರ ಕೈಗೊಂಡಿದ್ದರು. ಆದರೆ, ಅಲ್ಲಿ ಬಿಜೆಪಿ ಪಕ್ಷ ಅಂದುಕೊಂಡಂತೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಎಲ್ಲೋ ಒಂದು ಕಡೆ ಬಿಜೆಪಿ ಹೈಕಮಾಂಡ್ ಲಕ್ಷ್ಮಣ್ ಸವದಿ ಮೇಲೆ ಇಟ್ಟಿರುವ ನಂಬಿಕೆಯನ್ನು ಅವರು ಉಳಿಸಿಕೊಂಡಿಲ್ಲ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.
ಈ ಹಿಂದೆ ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಆಪ್ತರ ಬಳಿ ಸವದಿ ಹೇಳಿದ್ದರು ಎನ್ನಲಾಗಿದೆ. ಆದರೆ, ಇವತ್ತಿನ ಸುಪ್ರೀಂಕೋರ್ಟ್ ಆದೇಶ ಹಾಗೂ ಸಿಎಂ ಯಡಿಯೂರಪ್ಪರ ಮಾತು ಕೇಳಿ ಲಕ್ಷ್ಮಣ್ ಸವದಿ ಬೇಸರವಾಗಿದ್ದಾರೆ ಎನ್ನಲಾಗಿದೆ. ಸದ್ಯ ಅಥಣಿ ಉಪಚುನಾವಣೆಯಲ್ಲಿ ಮಹೇಶ್ ಕುಮಟಳ್ಳಿ ಜಯಭೇರಿ ಬಾರಿಸುವ ಮೂಲಕ ವಿಧಾನಸಭಾ ಪ್ರವೇಶ ಮಾಡಿದರೆ ಲಕ್ಷ್ಮಣ ಸವದಿ ಆಟಕ್ಕುಂಟು ಲೆಕ್ಕಕ್ಕಿಲ್ಲಾ ಆಗುತ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲೂ ಎದ್ದಿದೆ.