ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆಯಲಿದೆ ಎಂದು ಅಭ್ಯರ್ಥಿ ಆಯ್ಕೆ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಡೆದ ಸಭೆಯಲ್ಲಿ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಚುನಾವಣೆ ಎದುರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಅಭ್ಯರ್ಥಿ ಆಯ್ಕೆ ಸಂಬಂಧ ಆರಂಭಿಕ ಹಂತದಲ್ಲಿ ಇಂದು ಸಭೆ ನಡೆಸಲಾಗಿದೆ. ಮುಂದಿನ ವಾರ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜಿಲ್ಲಾಮಟ್ಟದ ನಾಯಕರನ್ನು ಒಳಗೊಂಡ ಮತ್ತೊಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ. ಇದಾದ ಬಳಿಕ ಬೆಳಗಾವಿ ಲೋಕಸಭೆ ಕ್ಷೇತ್ರದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಸಭೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
ಸತೀಶ್ ಜಾರಕಿಹೊಳಿ ಒಳಗೊಂಡಂತೆ ಎಂಟು ಜನರು ಸ್ಪರ್ಧಿಸಲು ಆಸಕ್ತಿ ತೋರಿದ್ದಾರೆ. ಇಂದು ನಡೆದ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರೇ ಸ್ಪರ್ಧಿಸಲಿ ಎಂದು ಜಿಲ್ಲಾ ನಾಯಕರು ಅಭಿಪ್ರಾಯ ಮಂಡಿಸಿದ್ದಾರೆ. ಚುನಾವಣೆ ಘೋಷಣೆ ಬಳಿಕ ಮತ್ತಷ್ಟು ಜನರು ಆಸಕ್ತಿ ವಹಿಸಬಹುದು. ಎಲ್ಲರ ಅರ್ಜಿಗಳನ್ನು ಸ್ವೀಕರಿಸಿ ಹಾಗೂ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದರು.
ಮರಾಠ ಅಭಿವೃದ್ಧಿ ನಿಗಮ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಪಕ್ಷದ ನಾಯಕರೇ ಪ್ರತಿಕ್ರಿಯೆ ನೀಡುತ್ತಾರೆ. ನನಗೆ ಅಭ್ಯರ್ಥಿ ಆಯ್ಕೆ ಜವಾಬ್ದಾರಿ ಕೊಟ್ಟಿದ್ದಾರೆ. ಅದರ ಭಾಗವಾಗಿ ಇಂದು ಮೊದಲ ಸಭೆ ನಡೆಸಲಾಗಿದೆ. ಮುಂದೆಯೂ ಇನ್ನೆರಡು ಸಭೆ ನಡೆಸಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಬಳಿಕ ಆಕಾಂಕ್ಷಿಗಳ ಪಟ್ಟಿಯನ್ನು ಕೆಪಿಸಿಸಿಗೆ ರವಾನಿಸುತ್ತೇವೆ ಎಂದರು.
ಚನ್ನರಾಜ್ ಸ್ಪರ್ಧೆ ಪಕ್ಷಕ್ಕೆ ಬಿಟ್ಟ ವಿಚಾರ...
ಇನ್ನು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ನನ್ನ ಸಹೋದರ ಚನ್ನರಾಜ್ ಸ್ಪರ್ಧೆ ಮಾಡುತ್ತಾನೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ತಲೆಬಾಗುತ್ತೇವೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಉಪಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಚಿವ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗಿದೆ. ನಮ್ಮ ಅಭಿಪ್ರಾಯವನ್ನು ಸಮಿತಿ ಮುಂದೆ ಹೇಳಿದ್ದೇವೆ. ನನ್ನ ಸಹೋದರ ಸ್ಪರ್ಧಿಸುತ್ತಾನೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಪಕ್ಷ ಆಯ್ಕೆ ಮಾಡುವ ಅಭ್ಯರ್ಥಿ ಪರ ನಾವು ಕೆಲಸ ಮಾಡುತ್ತೇವೆ ಎಂದರು.
ಬೆಳಗಾವಿ ಲೋಕಸಭೆಯ ಉಪಚುನಾವಣೆ ನಾವು ಬಯಸಿದ್ದು ಅಲ್ಲ. ಸುರೇಶ್ ಅಂಗಡಿ ಅವರದ್ದು ಸಾಯುವ ವಯಸ್ಸಾಗಿರಲಿಲ್ಲ. ಸುರೇಶ್ ಅಂಗಡಿ ಅವರು ಬಿಜೆಪಿಯಲ್ಲಿದ್ದರೂ ನನ್ನ ಕ್ಷೇತ್ರಕ್ಕೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಅವರೆಂದೂ ಪಕ್ಷಪಾತ ಮಾಡಿಲ್ಲ. ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಕಾರಣ ಈ ಚುನಾವಣೆ ಬಂದಿದೆ. ಈ ಉಪಚುನಾವಣೆಯನ್ನು ನಾನಾಗಲಿ, ಸುರೇಶ್ ಅಂಗಡಿ ಕುಟುಂಬವಾಗಲಿ ಹಾಗೂ ಕ್ಷೇತ್ರದ ಜನರೂ ಬಯಸಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಅನಿವಾರ್ಯ ಸಂದರ್ಭದಲ್ಲಿ ಚುನಾವಣೆ ಬಂದಿದ್ದು, ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಿ ಪಕ್ಷ ನಿರ್ಧಾರ ಕೈಗೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು.