ಬೆಳಗಾವಿ: ಒಂದು ತಿಂಗಳ ಕಾಲ ಉಪವಾಸ ಆಚರಿಸುವ ಶಾಂತಿ ಮತ್ತು ತ್ಯಾಗದ ಸಂಕೇತವಾಗಿರುವ ರಂಜಾನ್ ಹಬ್ಬವನ್ನು ತಮ್ಮ ಮನೆಗಳಲ್ಲಿಯೇ ಶ್ರದ್ಧಾಪೂರ್ವಕವಾಗಿ ಆಚರಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮುಸ್ಲಿಂ ಮುಖಂಡರಿಗೆ ಸಲಹೆ ನೀಡಿದರು.
ಜಿಲ್ಲೆಯ ಗೋಕಾಕ್ ತಾಲೂಕಿನ ಮುಸ್ಲಿಂ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಸಚಿವರು, ಜಗತ್ತಿನಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅದನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸಲಹೆ ಸೂಚನೆಗಳನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
![Meeting with Muslim leaders in the wake of Ramadan](https://etvbharatimages.akamaized.net/etvbharat/prod-images/6948441_ramjan.jpg)
ಲಾಕ್ಡೌನ್ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಜನತೆ ಕಡ್ಡಾಯವಾಗಿ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು, ಸಾಮಾಜಿಕ ಅಂತರವನ್ನು ಪಾಲಿಸಬೇಕು. ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಅನವಶ್ಯಕವಾಗಿ ಯಾರೂ ರಸ್ತೆಗಿಳಿಯಬಾರದೆಂದು ಮುಸ್ಲಿಂ ಸಮುದಾಯದ ಮುಖಂಡರಲ್ಲಿ ಸಚಿವರು ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಮುಸ್ಲಿಂ ಸಮುದಾಯದ ಮುಖಂಡರು, ಸರ್ಕಾರದ ನಿಯಮಗಳನ್ನು ಪಾಲಿಸಿ, ಉಪವಾಸ ವ್ರತವನ್ನು ಆಚರಿಸುವುದಾಗಿ ಭರವಸೆ ನೀಡಿದರು.