ಅಥಣಿ : ಅಥಣಿ-ಕಾಗವಾಡ ಹೆದ್ದಾರಿ ಐಗಳಿ ಕ್ರಾಸ್ವರೆಗೆ ಸಂಪೂರ್ಣ ಹದಗೆಟ್ಟಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಜನಪ್ರತಿನಿಧಿಗಳ ಹಾಗೂ ಅಧಿಕಾರಗಳ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಕಳೆದ ವರ್ಷ 900 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದರು. ಕಳೆದ ಒಂದು ವರ್ಷದಿಂದ ಯಾವುದೇ ಕಾಮಗಾರಿ ಕಾರ್ಯರೂಪಕ್ಕೆ ಬಂದಿಲ್ಲ.
ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಸಚಿವ ಶ್ರೀಮಂತ ಪಾಟೀಲ್ ಮತ್ತು ನಿಗಮ ಮಂಡಳಿ ಅಧ್ಯಕ್ಷ ಮಹೇಶ್ ಕುಮಟಳ್ಳಿ ಅವರು ಇದೇ ಭಾಗದವರಾದರೂ ನಮ್ಮ ಭಾಗದ ರಸ್ತೆ ಬಗ್ಗೆ ಹೆಚ್ಚಿನ ಆಸಕ್ತಿ ನೀಡುತ್ತಿಲ್ಲ ಎಂದು ಸ್ಥಳೀಯರಾದ ಪ್ರಕಾಶ್ ಆರೋಪಿಸಿದರು.
ಜನಪ್ರತಿನಿಧಿಗಳ ಹಿತಾಶಕ್ತಿ ಕೊರತೆಯಿಂದ ಈ ಭಾಗದ ಜನರು ಪರದಾಡುವಂತಾಗಿದೆ. ಇದರಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ರೋಗಿಗಳು ಹಾಗೂ ವಾಹನ ಸವಾರರು ನರಕ ಯಾತನೆ ಅನುಭವಿಸುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಅತಿಯಾದ ಧೂಳಿನಿಂದ ಅಕ್ಕಪಕ್ಕದ ಮನೆ ಹಾಗೂ ದ್ವಿಚಕ್ರ ವಾಹನ ಸವಾರರ ಸ್ಥಿತಿ ಹೇಳತೀರದು. ಮುಂದಿನ ತಿಂಗಳು ರಸ್ತೆ ದುರಸ್ಥಿ ಕಾರ್ಯ ಮಾಡದಿದ್ದರೆ ಉಗ್ರ ಹೋರಾಟ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದರು.