ಬೆಂಗಳೂರು: ಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ನಿರ್ಮಿಸಲು ರಕ್ಷಣಾ ಇಲಾಖೆ ಸ್ವಾಧೀನದಲ್ಲಿ ಇರುವ ಸುಮಾರು 750 ಎಕರೆ ಭೂಮಿ ಸರ್ಕಾರಕ್ಕೆ ಬಿಟ್ಟುಕೊಡುವಂತೆ ರಾಜ್ಯದ ಐಟಿ/ಬಿಟಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ರಾಜನಾಥ್ ಸಿಂಗ್ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಜಾಗವನ್ನು ಕರ್ನಾಟಕ ಸರ್ಕಾರಕ್ಕೆ ಬಿಟ್ಟುಕೊಟ್ಟರೆ ಐಟಿ ಉದ್ಯಮದ ಜೊತೆಗೆ ಎಲೆಕ್ಟ್ರಾನಿಕ್ ಹಾರ್ಡ್ ವೇರ್, ವೈಮಾನಿಕ ಆಂತರಿಕ್ಷ ಹಾಗೂ ಇತರ ತಯಾರಿಕಾ ಉದ್ಯಮಗಳ ಬೆಳವಣಿಗೆಗೆ ಪೂರಕವಾಗುವಂತೆ ಬಳಸಿಕೊಳ್ಳಲಾಗುವುದು ತಿಳಿಸಿದರು.
ದಾಖಲೆಗಳ ಪ್ರಕಾರ ಬೆಳಗಾವಿ ಗ್ರಾಮದ ಆರ್.ಎಸ್. ನಂಬರ್ 1304ರಿಂದ 1397ರವರೆಗಿನ ಜಾಗವು ರಾಷ್ಟ್ರೀಯ ಹೆದ್ದಾರಿ- 4ಕ್ಕೆ ಹೊಂದಿಕೊಂಡಂತೆ ಇದೆ. ಉದ್ದೇಶಿತ ಐಟಿ ಪಾರ್ಕ್ ಸ್ಥಾಪನೆಗೆ ಅನುಕೂಲಕರವಾಗಿದೆ. ಈ ಜಾಗವನ್ನು ರಾಜ್ಯ ಸರ್ಕಾರ ಪುನರ್ ಸ್ವಾಧೀನಕ್ಕೆ ತೆಗೆದುಕೊಳ್ಳಲು 2012ರ ನವೆಂಬರ್ನಲ್ಲೇ ಆದೇಶ ಹೊರಡಿಸಿದೆ. ಆದರೆ ಇದು ರಕ್ಷಣಾ ಇಲಾಖೆ ಸ್ವಾಧೀನದಲ್ಲೇ ಮುಂದುವರಿದಿದೆ ಎಂಬ ಅಂಶವನ್ನು ಡಿಸಿಎಂ ಮನವರಿಕೆ ಮಾಡಿಕೊಟ್ಟರು.
ಇದನ್ನೂ ಓದಿ: ಭದ್ರಾ, ಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿಸಲು ಯತ್ನ: ಸಚಿವ ರಮೇಶ್ ಜಾರಕಿಹೊಳಿ
ಕರ್ನಾಟಕ ರಾಜ್ಯವು ಐಟಿ/ಐಟಿಇಎಸ್ ಉದ್ಯಮದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಈ ಅಗ್ರ ಶ್ರೇಯಾಂಕ ಕಾಯ್ದುಕೊಳ್ಳುವ ದಿಸೆಯಲ್ಲಿ ಇತ್ತೀಚೆಗೆ ಹೊಸ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ ಪ್ರಕಟಿಸಲಾಗಿದೆ. ಜೊತೆಗೆ ಬೆಂಗಳೂರು ಹೊರತಾದ ಬೇರೆ ಪ್ರದೇಶಗಳಲ್ಲೂ ಐಟಿ/ಐಟಿಇಎಸ್ ಹಾಗೂ ಎಲೆಕ್ಟ್ರಾನಿಕ್ ಉದ್ಯಮಗಳನ್ನು ಬೆಳೆಸಿ, ರಾಜ್ಯದಲ್ಲಿ ಸಮತೋಲನದ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ‘ಬಿಯಾಂಡ್ ಬೆಂಗಳೂರು’ ಯೋಜನೆ ಜಾರಿಗೊಳಿಸಿದೆ. ಹೀಗಾಗಿ, ಈ ಜಾಗ ಬಿಟ್ಟುಕೊಟ್ಟರೆ ಉದ್ಯಮದ ಬೆಳವಣಿಗೆಗೆ ಅನುವು ಮಾಡಿಕೊಟ್ಟಂತೆ ಆಗುತ್ತದೆ ಎಂದರು.
ಬೆಳಗಾವಿಯು ಉತ್ತಮ ಶೈಕ್ಷಣಿಕ ವಲಯವಾಗಿದೆ. ಪಕ್ಕದ ಧಾರವಾಡದಲ್ಲಿ ಐಐಟಿ-ಧಾರವಾಡ, ಕೆಎಲ್ಇಯಂತಹ ಉನ್ನತ ಶಿಕ್ಷಣ ಸಂಸ್ಥೆಗಳು ಇರುವುದರಿಂದ ಪ್ರತಿವರ್ಷ ಪ್ರತಿಭಾವಂತ ಪದವೀಧರರು ಹೊರಬರುತ್ತಿದ್ದಾರೆ. ಜೊತೆಗೆ ಇಲ್ಲಿ ಐಟಿ/ಐಟಿಇಎಸ್ ಉದ್ಯಮಕ್ಕೆ ಸೂಕ್ತವಾದ ಪರ್ಯಾವರಣವಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಐಟಿ ಪಾರ್ಕ್ ನಿರ್ಮಾಣದಿಂದ ಈ ಕ್ಷೇತ್ರದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಇದೆ. ಈ ಐಟಿ ಪಾರ್ಕ್ ನಿರ್ಮಾಣವು ಭಾರತದ ಟ್ರಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕತೆ ಗುರಿಯಲ್ಲಿ ಕರ್ನಾಟಕದ ಶೇ 30ರಷ್ಟು ಕೊಡುಗೆಗೆ ಪೂರಕವಾಗಿರಲಿದೆ ಎಂದು ಅಶ್ವತ್ಥ ನಾರಾಯಣ ಮನವರಿಕೆ ಮಾಡಿಕೊಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಡಿಸಿಎಂ ಜತೆ ರಾಜನಾಥ್ ಅವರನ್ನು ಭೇಟಿ ಮಾಡಿದರು.